ಬಾಗಲಕೋಟೆ : ರಾಜ್ಯದಲ್ಲಿ ಶೀಘ್ರವೇ 16,500 ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ “ಶಿಕ್ಷಣ ಇಲಾಖಾ ಪ್ರಗತಿ ಪರಿಶೀಲನಾ ಸಭೆ” ನಡೆಸಲಾಯಿತು. ಈ ವೇಳೆ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಶಾಲೆಗಳಲ್ಲಿ ಈ ವರ್ಷವೇ ಹಲವು ಬದಲಾವಣೆ ಮಾಡಲಾಗುತ್ತದೆ. ಆದರ್ಶ ಶಾಲೆಗಳಲ್ಲಿ ಈ ವರ್ಷದಿಂದಲೇ ಪಿಯುಸಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ. ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಸಚಿವರು ಹೇಳಿದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ “ಸರ್ಕಾರಿ ಶಾಲೆಗಳ ಸುಧಾರಣೆಗೆ” ಕೈಗೊಳ್ಳಬೇಕಾದ ಹಲವಾರು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.
“ಸಭೆಯಲ್ಲಿ ಚರ್ಚಿಸಲಾದ ವಿಷಯಗಳು”
ಬಾಗಲಕೋಟೆ ಜಿಲ್ಲಾ ವ್ಯಾಪ್ತಿಯ ಜಮಖಂಡಿ, ಮುಧೋಳ, ಬೀಳಗಿ, ಬಾದಾಮಿ, ಬಾಗಲಕೋಟೆ, ಹುನಗುಂದ ತಾಲೂಕುಗಳಲ್ಲಿನ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು.
ಪಠ್ಯಪುಸ್ತಕ/ಸಮವಸ್ತ್ರ/ಶೂ-ಸಾಕ್ಸ್ ಗಳನ್ನು ಶಾಲಾ ಪ್ರಾರಂಭದ ಅವಧಿಯಲ್ಲಿ ಏಕಕಾಲಕ್ಕೆ ಪೂರೈಸುವ ಕುರಿತು.
ಮಕ್ಕಳಿಗೆ ಸರಿಯಾದ ಸಮಯಕ್ಕೆ ಮಧ್ಯಾಹ್ನದ ಬಿಸಿ ಊಟ ಹಾಗೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಕಾಳಜಿವಹಿಸಿ ತರಬೇತಿ ನೀಡುವ ಕುರಿತು.
ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಕುರಿತು.
ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಮೂಲಕ ಸರಕಾರಿ ಶಾಲೆಗಳನ್ನು ಬೆಳೆಸುವ ಕುರಿತು.
ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸುವ ಕುರಿತು.
ಸರ್ಕಾರಿ ಶಾಲೆಗಳ ಕೊಠಡಿಗಳ ದುರಸ್ತಿ ಕಾಮಗಾರಿ ಮತ್ತು ಶೌಚಾಲಯ ನಿರ್ಮಾಣ ಕಾರ್ಯ ಕುರಿತು.
ಶಿಕ್ಷಕರಿಗೆ ತರಬೇತಿ ನೀಡುವ ಕುರಿತು.
ಮಕ್ಕಳ ಗೈರು ಹಾಜರಿ ಬಗ್ಗೆ ಗಮನಹರಿಸಿ, ಶಾಲೆಗೆ ಕರೆತರುವ ಕುರಿತು.
ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮವನ್ನು ಆರಂಭಿಸುವ ಕುರಿತು.
ಸರ್ಕಾರಿ ಶಾಲೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದರ ಜೊತೆಗೆ ಅನೇಕ ಮಹತ್ವದ ಬದಲಾವಣೆಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಸಭೆಯಲ್ಲಿ ಬಾಗಲಕೋಟೆ ಜಿಲ್ಲಾಧಿಕಾರಿ ಶ್ರೀಮತಿ ಜಾನಕಿ ಕೆ.ಎಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಶಶಿಧರ ಕುರೇರ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಹನುಮಂತ ನಿರಾಣಿ, ಶಾಸಕರಾದ ಶ್ರೀ ಭೀಮಸೇನ ಚಿಮ್ಮನಕಟ್ಟಿ, ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.