ಬೆಂಗಳೂರು: ಈ ತಿಂಗಳಾಂತ್ಯಕ್ಕೆ ಅವಧಿ ಪೂರ್ಣಗೊಳ್ಳಲಿರುವ ರಾಜ್ಯದ 180 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿ ಅಂತಿಮ ಅಧಿಸೂಚನೆ ಹೊರಡಿಸಲು ಕನಿಷ್ಠ 150 ದಿನಗಳಾದರೂ ಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.
ಎರಡನೇ ಅವಧಿಗೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಲು ವಿಳಂಬವಾದ ಹಿನ್ನೆಲೆಯಲ್ಲಿ 16 ತಿಂಗಳ ಕಾಲ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ್ದ ಅವಧಿಯನ್ನು ತಮ್ಮ ಐದು ವರ್ಷದ ಅಧಿಕಾರ ಅವಧಿಗೆ ಪರಿಗಣಿಸಬಾರದು ಅವಧಿ ಮುಗಿಯಲಿರುವ ಸ್ಥಳೀಯ ಸಂಸ್ಥೆಗಳಿಗೆ ಆಡಳಿತ ಅಧಿಕಾರಿಗಳ ನೇಮಕಕ್ಕೆ ಮುಂದಾಗದಂತೆ ನಿರ್ದೇಶನ ನೀಡಬೇಕು ಎಂದು 65ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಹೈಕೋರ್ಟ್ ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು.
ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ಪೀಠಕ್ಕೆ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಈ ವಿಷಯ ತಿಳಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗ, ಕೆಲವು ನಗರ ಸ್ಥಳೀಯ ಸಂಸ್ಥೆಗಳಿಗಷ್ಟೇ ವಾರ್ಡ್ ಪುನರ್ ವಿಂಗಡಣೆ ಮಾಡಬೇಕಿದೆ. ಸರ್ಕಾರ ಮೀಸಲಾತಿ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ ಮತದಾರರ ಪಟ್ಟಿ ತಯಾರಿಸಲು ಅನುಮತಿ ನೀಡಬೇಕು ಎಂದಿದೆ.
ಸರ್ಕಾರ ಮತ್ತು ಚುನಾವಣಾ ಆಯೋಗದ ವಾದವನ್ನು ಆಲಿಸಿದ ನ್ಯಾಯಪೀಠ, ಚುನಾವಣೆ ನಡೆಸುವುದಕ್ಕೆ ಮೊದಲು ವಾರ್ಡ್ ಪುನರ್ ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ನಿರ್ದಿಷ್ಟವಾಗಿ ಯಾವ ಕಾಲಮಿತಿಯಲ್ಲಿ ಮುಗಿಯಲಿದೆ. ಪ್ರಕ್ರಿಯೆ ನಡೆಯುತ್ತಿರುವಾಗಲೇ ಚುನಾವಣಾ ಆಯೋಗ ಮತದಾರರ ಪಟ್ಟಿ ತಯಾರಿಸುವ ಕಾರ್ಯ ನಡೆಸಬಹುದೇ ಎಂಬ ಬಗ್ಗೆ ಚರ್ಚಿಸಲು ಸರ್ಕಾರ ಆಯೋಗ ನವೆಂಬರ್ 5 ರಂದು ಸಭೆ ನಡೆಸಿ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 11ಕ್ಕೆ ಮುಂದೂಡಿದೆ.
