ನವದೆಹಲಿ : ತೀವ್ರ ಕುತೂಹಲ ಮೂಡಿಸಿದ್ದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಬರೋಬ್ಬರಿ 27 ವರ್ಷಗಳ ಬಳಿಕ ದೆಹಲಿಯಲ್ಲಿ ಕಮಲ ಅರಳಿದೆ.
ಆಡಳಿತರೂಢ ಆಪ್ ಮೂರನೇ ಬಾರಿ ಅಧಿಕಾರಿಗಳ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿತ್ತು ಆದರೆ ಚುನಾವಣಾ ಫಲಿತಾಂಶದಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ. ಎಎಪಿ ಮುಖ್ಯಸ್ಥ ಅರವಿಂದ ಕೇಜ್ರವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಸೇರಿ ಎಎಪಿ ಪಕ್ಷದ ಪ್ರಭಾವಿ ನಾಯಕರು ಹೀನಾಯ ಸೋಲು ಅನುಭವಿಸಿದ್ದಾರೆ. ದೆಹಲಿ ಸಿಎಂ ಅತಿಶಿ ಗೆಲುವು ದಾಖಲಿಸಿದ್ದಾರೆ.
70 ವಿಧಾನಸಭಾ ಕ್ಷೇತ್ರದಲ್ಲಿ 48 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಅಧಿಕಾರದ ಗದ್ದುಗೆ ಏರುವ ತವಕದಲ್ಲಿದೆ. ಆಮ್ ಆದ್ಮಿ ಕೇವಲ 22 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ ಕಾಂಗ್ರೆಸ್ ಯಾವುದೇ ಖಾತೆ ತೆರೆಯದೇ ಹೀನಾಯ ಸೋಲು ಅನುಭವಿಸಿದೆ.ಭರ್ಜರಿ ಬಹುಮತಗಳಿಸಿರುವ ಬಿಜೆಪಿ ಗೆಲುವಿನ ಸಂಭ್ರಮದಲ್ಲಿದ್ದು, ಮುಂದಿನ ಸಿಎಂ ಯಾರು ಎಂಬ ಕುತೂಹಲ ಎಲ್ಲರಲ್ಲಿದೆ.
ಎಣಿಕೆ ಪ್ರಕ್ರಿಯೆಯಲ್ಲಿ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು ಪ್ರತಿ ಕ್ಷೇತ್ರದಲ್ಲಿ ವಿವಿಪ್ಯಾಟ್ ಗಳ (ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ಸ್) ಯಾದೃಚ್ಛಿಕ ಆಯ್ಕೆಯನ್ನು ನಡೆಸಲಾಯಿತು. ಫೆಬ್ರವರಿ 5 ರಂದು ನಡೆದ ಚುನಾವಣೆಯಲ್ಲಿ ಶೇಕಡಾ 60.54 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 7.45 ಕ್ಕೆ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ.