
ಹೊಸಪೇಟೆ: ನಾಡಿನ ಕಲೆ ವಾಸ್ತುಶಿಲ್ಪದ ತೊಟ್ಟಿಲು ವಿಶ್ವಪ್ರಸಿದ್ಧ ಹಂಪಿಯಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 2ರವರೆಗೆ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಯಲಿದೆ.
ಪ್ರವಾಸೋದ್ಯಮ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ ವಿಜಯನಗರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಂಪಿ ಉತ್ಸವ ಹಮ್ಮಿಕೊಳ್ಳಲಾಗಿದೆ. ಫೆಬ್ರವರಿ 28ರಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಉಪಸ್ಥಿತರಿರುವರು. ಸಚಿವರಾದ ಜಮೀರ್ ಅಹ್ಮದ್ ಖಾನ್, ರಾಮಲಿಂಗಾ ರೆಡ್ಡಿ, ಹೆಚ್.ಕೆ. ಪಾಟೀಲ್, ಶಿವರಾಜ್ ತಂಗಡಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಶಾಸಕ ಹೆಚ್.ಆರ್. ಗವಿಯಪ್ಪ ಅಧ್ಯಕ್ಷತೆ ವಹಿಸಲಿದ್ದು, ಸಂಸದರು, ವಿಧಾನಸಭೆ, ವಿಧಾನಪರಿಷತ್ ಶಾಸಕರು, ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಹಂಪಿ ಗಾಯತ್ರಿ ಪೀಠದ ಎಂ.ಪಿ. ಪ್ರಕಾಶ್ ಪ್ರಧಾನ ವೇದಿಕೆ ಹಾಗೂ 4 ಸಮಾನಾಂತರ ವೇದಿಕೆಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಕನ್ನಡ ಚಲನಚಿತ್ರರಂಗದ ಖ್ಯಾತ ನಟ, ನಟಿಯರು, ಸಂಗೀತ ನಿರ್ದೇಶಕರು, ಹಿನ್ನೆಲೆ ಗಾಯಕರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಆನೆ ಲಾಯ ಆವರಣದಲ್ಲಿ ವಿಜಯನಗರ ವೈಭವದ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಇರಲಿದೆ. ಶಿಲ್ಪಕಲಾ ಶಿಬಿರ, ಚಿತ್ರಕಲಾ ಶಿಬಿರ, ಬೈಕ್ ರ್ಯಾಲಿ, ತುಂಗಾ ಆರತಿ, ದೋಣಿ ವಿಹಾರ, ವಿಜಯನಗರ ವಸಂತ ವೈಭವ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.