
ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಯ ಕೆಲವು ಕಡೆ ಬುಧವಾರ ಗುಡುಗು ಸಹಿತ ಮಳೆ ಆಗುವ ಸಂಭವ ಇದೆ. ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಕೆಲವು ಕಡೆಗಳಲ್ಲಿ ಮಂಗಳವಾರ ಸಂಜೆ ತುಂತುರು ಮಳೆಯಾಗಿದ್ದು, ಇದು ವರ್ಷದ ಮೊದಲ ಮಳೆಯಾಗಿದೆ. ಬುಧವಾರ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ಶಾಂತಿನಗರ, ಎಂಜಿ ರಸ್ತೆ, ಬನಶಂಕರಿ, ಬಸವನಪುರ ಸೇರಿ ಕೆಲವು ಕಡೆ ಮಂಗಳವಾರ ಸಂಜೆ ದಿಢೀರ್ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನಕ್ಕೆ ತಂಪಿನ ಅನುಭವವಾಗಿದೆ.