
ನವದೆಹಲಿ: ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಜೋಡಣೆ ಮಾಡುವ ಬಗ್ಗೆ ಚರ್ಚೆ ಕೇಂದ್ರ ಚುನಾವಣಾ ಆಯೋಗ ನಾಳೆ ಮಹತ್ವದ ಸಭೆ ಕರೆದಿದೆ.
ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಯುತ್ತಿದೆ ಎನ್ನುವ ವಿರೋಧ ಪಕ್ಷಗಳ ಆರೋಪ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಗೃಹ ಇಲಾಖೆ ಕಾರ್ಯದರ್ಶಿ ಗೋವಿಂದ್ ಮೋಹನ್, ಶಾಸಕಾಂಗ ಇಲಾಖೆ ಕಾರ್ಯದರ್ಶಿ ರಾಜೀವ್ ಮಣಿ ಮತ್ತು ಯುಐಡಿಎಐ ಸಿಇಒ ಭುವನೇಶ್ ಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ.
2023ರ ಸೆಪ್ಟೆಂಬರ್ ನಲ್ಲಿ ಮತದಾರರ ನೋಂದಣಿ(ತಿದ್ದುಪಡಿ) ನಿಯಮಗಳು -2022ರ ನಿಯಮ 26 -ಬಿ ಅಡಿಯಲ್ಲಿ ಆಧಾರ್ ಸಂಖ್ಯೆ ಸಲ್ಲಿಸುವುದು ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಗೆ ತಿಳಿಸಿತ್ತು.
2022 ರಲ್ಲಿ ಕೇಂದ್ರ ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜು ಆಧಾರ್ ಅನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಲಿಂಕ್ ಮಾಡುವುದು ಸ್ವಯಂ ಪ್ರೇರಿತವಾಗಿದೆ. ಆಧಾರ್ ಸಂಖ್ಯೆ ಇಲ್ಲದೆ ಮತದಾರರನ್ನು ಸೇರಿಸುವುದರಿಂದ ಐಚ್ಚಿಕ ದಾಖಲೆ ಬಳಸಬಹುದು ಎಂದು ಹೇಳಿದ್ದರು. ಈಗ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಜೋಡಣೆ ಚಿಂತನೆ ನಡೆಸುತ್ತಿರುವುದು ವಿಪಕ್ಷಗಳ ಟೀಕೆಗೆ ಕಾರಣವಾಗಿದೆ.