
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ದೇರಳಕಟ್ಟೆಯಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ಪರಾರಿಯಾಗಿದ್ದಾನೆ.
ಕೋಣಾಜೆ ಪೊಲೀಸರು ಸ್ಥಳೀಯರ ಸಹಾಯದಿಂದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮುರಳಿ ಹಾಗೂ ಇರ್ಷಾದ್ ಬಂಧಿತ ಆರೋಪಿಗಳು. ಈ ಇಬ್ಬರೂ ಕೇರಳದ ವಿಜಯ ಬ್ಯಾಂಕ್ ಕಳ್ಳತನ ಪ್ರಕರಣದಲ್ಲಿಯೂ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.
ಕೇರಳದಿಂದ ರೈಲಿನಲ್ಲಿ ಬಂದಿದ್ದ ಮೂವರು ಆರೋಪಿಗಳು ಶನಿವಾರ ರಾತ್ರಿ ದೇರಳಕಟ್ಟೆಬಳಿ ಕಾದು ಕುಳಿತಿದ್ದಾರೆ. ಇಂದು ಬೆಳಗಿನ ಜಾವ 3ಗಂಟೆ ಸುಮಾರಿಗೆ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿ ಡ್ರಿಲ್ಲಿಂಗ್ ಮೆಷಿನ್ ಮೂಲಕ ಬಾಗಿಲು ಮುರಿಯಲು ಯತ್ನಿಸಿದಾಗ ಸೈರನ್ ಮೊಳಗಿದೆ. ತಕ್ಷಣ ಎಚ್ಚೆತ್ತ ಗಸ್ತಿನಲ್ಲಿದ್ದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಮೂವರು ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಸ್ಥಳೀಯರ ನೆರವಿನಿಂದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.
ಮೂರನೇ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ.