ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಸಾವನ್ನಪ್ಪಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳ ತಂಡ ಇಂದು ಶಿವಮೊಗ್ಗದಲ್ಲಿ ಮಂಜುನಾಥ್ ಅವರ ನಿವಾಸಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.
ಶಿವಮೊಗ್ಗದ ವಿಜಯನಗರ ಬಡಾವಣೆಯಲ್ಲಿರುವ ಮಂಜುನಾಥ್ ಅವರ ಮನೆಗೆ ಭೇಟಿ ನೀಡಲಿರುವ ಎನ್ಐಎ ಅಧಿಕಾರಿಗಳ ತಂಡ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಪುತ್ರನಿಂದ ಹೇಳಿಕೆ ದಾಖಲಿಸಿಕೊಳ್ಳಲಿದೆ. ಭಯೋತ್ಪಾದಕರ ಕುರಿತಾಗಿ ಮಾಹಿತಿ ಕಲೆ ಹಾಕಲಿದೆ.
ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಕರ್ನಾಟಕದ ಮಂಜುನಾಥ್ ಮತ್ತು ಭರತ್ ಭೂಷಣ್ ಮೃತಪಟ್ಟಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ದಾಳಿಯ ವೇಳೆಯ ವಿಡಿಯೋ ಆಧರಿಸಿ ಹಲವರನ್ನು ವಿಚಾರಣೆಗೊಳಪಡಿಸಿದ್ದಾರೆ. ಪ್ರವಾಸಿಗ ರಿಷಿ ಭಟ್ ಅವರ ಸೆಲ್ಫಿ ವಿಡಿಯೋದಲ್ಲಿ ಜಿಪ್ ಲೈನ್ ಆಪರೇಟರ್ ‘ಅಲ್ಲಾಹು ಅಕ್ಬರ್’ ಎಂದು ಹೇಳಿದ್ದರಿಂದ ಆತನನ್ನು ಕೂಡ ವಿಚಾರಣೆಗೆ ಒಳಪಡಿಸಲಾಗಿದೆ.