ಕೃಷಿ ಚಟುವಟಿಕೆಗಳಿಗೆ ಕಾರ್ಮಿಕರ ಕೊರತೆಯಿಂದ ತೊಂದರೆ ಎದುರಿಸುವ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರೈತರ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಅವಕಾಶ ಕಲ್ಪಿಸಲು ಮುಂದಾಗಿದೆ.
ಅತಿವೃಷ್ಟಿ, ಅನಾವೃಷ್ಟಿ, ಕಾರ್ಮಿಕರ ಕೊರತೆ, ಕೂಲಿ ಹೆಚ್ಚಳ, ಬೆಲೆ ಏರಿಕೆ, ಬರ ಮೊದಲಾದ ಕಾರಣಗಳಿಂದ ತತ್ತರಿಸಿದ ರೈತರ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ನರೇಗಾ ಯೋಜನೆಯಡಿ ಕೃಷಿ ಕಾರ್ಯ ಕೈಗೊಳ್ಳಲು ಅವಕಾಶ ನೀಡಲು ಚಿಂತನೆ ನಡೆಸಿದೆ.
ಪ್ರಸ್ತುತ ನರೇಗಾ ದಿನಗೂಲಿ ನೌಕರರಿಗೆ 370 ರೂ. ನೀಡಲಾಗುತ್ತಿದ್ದು, ಹೆಚ್ಚಿನ ಕೃಷಿ ಕಾರ್ಮಿಕರು ನರೇಗಾ ಕೆಲಸಕ್ಕೆ ಹೋಗುತ್ತಿದ್ದಾರೆ. ಕೃಷಿ ಕಾರ್ಯಕ್ಕೆ ಕೆಲಸಗಾರರಿಲ್ಲದೆ ಕೃಷಿ ಚಟುವಟಿಕೆ, ಆಹಾರ ಉತ್ಪಾದನೆ ಮೇಲೆ ಪರಿಣಾಮ ಬೀರಿರುವುದರಿಂದ ನರೇಗಾ ಯೋಜನೆಯಡಿ ಕೃಷಿ ಚಟುವಟಿಕೆ ಕೈಗೊಳ್ಳಲು ಅವಕಾಶ ನೀಡುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
2025- 26 ನೇ ಸಾಲಿನಲ್ಲಿ ಇದು ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದ್ದು, ರೈತರಿಗೆ ಆರ್ಥಿಕ ಬಲ ತುಂಬುವ ಜೊತೆಗೆ ಕೃಷಿ ಚಟುವಟಿಕೆ ಉತ್ತೇಜಿಸುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ ಅವಕಾಶ ಕಲ್ಪಿಸಲಾಗುವುದು. ನರೇಗಾ ಯೋಜನೆಯಡಿ ಬಿತ್ತನೆ, ಭೂಮಿ ಉಳುಮೆ ಸೇರಿ ಕೃಷಿ ಚಟುವಟಿಕೆ ಕೈಗೊಳ್ಳಲು ಅವಕಾಶ ಕಲ್ಪಿಸುವ ಬಗ್ಗೆ ಸಂಸತ್ ನಲ್ಲಿ ಚರ್ಚೆಯಾಗಿದ್ದು, ಈ ಸಾಲಿನಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಲಾಗಿದೆ.