ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಈ ಕುರಿತಾಗಿ ಸುಳಿವು ನೀಡಿದ್ದಾರೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗದಿಂದ ಒಳ ಮೀಸಲಾತಿ ಸಂಬಂಧ ಪರಿಶಿಷ್ಟ ಜಾತಿಯವರ ಗಣತಿ ನಡೆಸಲಾಗುತ್ತಿದೆ. ಮೇ 23ಕ್ಕೆ ಗಣತಿ ಕಾರ್ಯ ಪೂರ್ಣಗೊಳ್ಳಬೇಕಿದೆ. ಆದರೆ, ಗಣತಿ ಕಾರ್ಯ ಕೈಗೊಳ್ಳಲು ಮತ್ತಷ್ಟು ಕಾಲಾವಕಾಶವನ್ನು ಆಯೋಗ ಕೇಳಿದೆ ಎನ್ನಲಾಗಿದ್ದು, ಇದರಿಂದ ಒಳಮಿಸಲಾತಿ ಸಂಬಂಧ ಕ್ರಮ ಕೈಗೊಳ್ಳಲು ಮತ್ತಷ್ಟು ಸಮಯ ಬೇಕಾಗಬಹುದು.
ಈ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಒಳಮಿಸಲಾತಿ ಬಗ್ಗೆ ಸಮೀಕ್ಷೆ ನಡೆಯುತ್ತಿದೆ. ಸಮಯ ವಿಸ್ತರಿಸುವಂತೆ ಆಯೋಗದವರು ಕೇಳಿದ್ದಾರೆ. ಸಮೀಕ್ಷೆಯಲ್ಲಿ ಕೆಲವು ಸಮಸ್ಯೆ ಇರಬಹುದು. ಅದನ್ನು ಆಯೋಗದವರು ಸರಿಪಡಿಸುತ್ತಾರೆ ಎಂದು ತಿಳಿಸಿದ್ದಾರೆ.