ಬಳ್ಳಾರಿ,: ಮುಂಗಾರು ಮಳೆ ಆರಂಭಗೊಂಡಿರುವ ಹಿನ್ನಲೆಯಲ್ಲಿ ಮಳೆಯಿಂದಾಗುವ ಹಾನಿ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಹವಾಮಾನ ಇಲಾಖೆಯ ಮಾಹಿತಿಯನ್ವಯ ಈ ಬಾರಿ ಹೆಚ್ಚು ಮಳೆಯಾಗುವ ಸಂಭವವಿರುವುದರಿಂದ ಮುಂದಾಗಬಹುದಾದ ಸಂಭವನೀಯ ಪ್ರವಾಹ, ಪ್ರಾಣ ಹಾನಿ, ಬೆಳೆ, ಮನೆ ಹಾನಿ ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಎಲ್ಲಾ ತಾಲ್ಲೂಕು ತಹಶೀಲ್ದಾರರು, ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಸಮರ್ಥವಾಗಿ ನಿರ್ವಹಿಸಬೇಕು ಎಂದರು.
ನದಿ ಪಾತ್ರದ ಗ್ರಾಮಗಳ ಕಡೆ ಹೆಚ್ಚಿನ ಮುಂಜಾಗ್ರತೆ ವಹಿಸಬೇಕು. ಸಂಭವನೀಯ ನೀರು ಮುಳುಗಡೆಯಾಗುವ ಗ್ರಾಮಗಳನ್ನು ಗುರುತಿಸಬೇಕು. ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕು ಭಾಗದಲ್ಲಿ ಹೆಚ್ಚು ಜಾಗೃತಿ ನೀಡಬೇಕು. ಕುರುಗೋಡು ಭಾಗದ ಸಿದ್ದಮ್ಮನಹಳ್ಳಿ ಗ್ರಾಮದಲ್ಲಿ ಹೆಚ್ಚಾಗಿ ಮಳೆ ಸುರಿದರೆ, ನಡು ಗ್ರಾಮದ ಸೇತುವೆ ಮುಳುಗಡೆಯಾಗಲಿದ್ದು, ಈ ಕುರಿತು ಎಚ್ಚರಿಕೆ ನೀಡಬೇಕು. ಅದೇರೀತಿಯಾಗಿ ಬಳ್ಳಾರಿ ತಾಲ್ಲೂಕು ಭಾಗದ ಕೆಲ ಗ್ರಾಮಗಳಲ್ಲಿಯೂ ಸಹ ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕು ಎಂದು ತಿಳಿಸಿದರು.
ಅಪಾಯ ತಲೆದೋರಬಹುದಾದ ಗ್ರಾಮಗಳನ್ನು ಗುರುತಿಸಿ ಮುನ್ನೆಚ್ಚರಿಕೆ ನೀಡಬೇಕು. ಅಲ್ಲಿನ ಮಕ್ಕಳು, ವಯಸ್ಕರು, ಜಾನುವಾರುಗಳನ್ನು ಆಯಾ ಗ್ರಾಮಾಡಳಿತಾಧಿಕಾರಿಗಳ ಸಹಯೋಗದೊಂದಿಗೆ ಗಣತಿ ಮಾಡಿಕೊಂಡು ಇಟ್ಟುಕೊಂಡಿರಬೇಕು ಎಂದು ತಹಶೀಲ್ದಾರರುಗಳಿಗೆ ನಿರ್ದೇಶನ ನೀಡಿದರು.
ಕಾಳಜಿ ಕೇಂದ್ರಗಳನ್ನು ತೆರೆಯಲು ಸ್ಥಳ ಗುರುತಿಸುವುದು, ಇತರೆ ಪೂರಕ ದಾಸ್ತಾನು ಸಜ್ಜುಮಾಡಿಕೊಳ್ಳಬೇಕು. ಔಷಧಿ ದಾಸ್ತಾನು ಇಟ್ಟುಕೊಳ್ಳಬೇಕು. ಈ ಕುರಿತು ತಾಲ್ಲೂಕು ವೈದ್ಯಾಧಿಕಾರಿಗಳ ಜೊತೆ ತಹಶೀಲ್ದಾರರು ಸಂಪರ್ಕದಲ್ಲಿರಬೇಕು. ಪ್ರವಾಹ ಪರಿಸ್ಥಿತಿ ಉದ್ಭವಿಸಿದರೆ ಜನ-ಜಾನುವಾರುಗಳಿಗೆ ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.
ಅತಿಹೆಚ್ಚು ಮಳೆಯಿಂದಾಗಿ ರಸ್ತೆಗಳಲ್ಲಿ ಮರ ಮತ್ತು ವಿದ್ಯುತ್ ಕಂಬಗಳು ಬೀಳುವುದು ಕಳೆದ ತಿಂಗಳಿನಲ್ಲಾದ ಮಳೆಯಿಂದ ಕಂಡುಬಂದಿದ್ದು, ಅಂತಹ ಮಹಾನಗರ ಪಾಲಿಕೆ, ಇತರೆ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ರಸ್ತೆಗೆ ಅಡ್ಡಲಾಗಿ ಇರುವ ಮರಗಳ ಕಟಾವಿಗೆ ಅರಣ್ಯ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಯವರು, ದುರಸ್ತಿ ವಿದ್ಯುತ್ ಕಂಬಗಳು ಸಹ ಕಂಡುಬAದಲ್ಲಿ ಜೆಸ್ಕಾಂ ಇಲಾಖೆಯ ಗಮನಕ್ಕೆ ತರಬೇಕು ಎಂದು ಸೂಚಿಸಿದರು.
ಮಳೆಯಿಂದಾಗುವ ಹಾನಿ, ಲಘು ಪ್ರವಾಹ ಹಾಗೂ ಸಮಸ್ಯೆಗಳಿಗೆ ಸಾರ್ವಜನಿಕರಿಗೆ ಸಂಪರ್ಕಿಸಲು ಆಯಾ ತಾಲ್ಲೂಕು ತಹಶೀಲ್ದಾರರ ಕಚೇರಿ ಮತ್ತು ಮಹಾನಗರ ಪಾಲಿಕೆ ಕಚೇರಿಗಳಲ್ಲಿ ಸಹಾಯವಾಣಿ ಸಂಖ್ಯೆ ಆರಂಭಿಸಬೇಕು. ಇದಕ್ಕೆ ಪೂರಕವಾಗಿ ಅಧಿಕಾರಿಗಳನ್ನು ನೇಮಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಅವರು ನಿರ್ದೇಶನ ನೀಡಿದರು.
ಮಳೆ-ಸಿಡಿಲು ಕುರಿತು ಜಾಗ್ರತೆ ಮೂಡಿಸಿ:
ಜಿಲ್ಲೆಯಲ್ಲಿ ಕಳೆದ ತಿಂಗಳಿನಲ್ಲಿ ಸುರಿದ ಅತಿಯಾದ ಮಳೆ-ಸಿಡಿಲಿನಿಂದ 04 ಸಾವು ಪ್ರಕರಣ ವರದಿಯಾಗಿದ್ದು, ಈ ಕುರಿತು ಗ್ರಾಪಂ ಪಿಡಿಒ ಮತ್ತು ಸ್ಥಳೀಯ ಮುಖಂಡರ ಜೊತೆಗೂಡಿ ಗ್ರಾಮಸಭೆಗಳಲ್ಲಿ ಹೆಚ್ಚಿನ ಅರಿವು ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ತಹಶೀಲ್ದಾರರಿಗೆ ಸೂಚಿಸಿದರು.
ಮಳೆಗಾಲದಲ್ಲಿ ಜೆಸ್ಕಾಂ ಸಂಬAಧಿತ ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ 1912 ಕುರಿತು ಹೆಚ್ಚಿನ ಪ್ರಚಾರ ನೀಡಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಗ್ರಾಪಂ ವ್ಯಾಪ್ತಿಗಳಲ್ಲಿ ಕುಡಿಯುವ ನೀರು ಕಲುಷಿತಗೊಳ್ಳದಂತೆ ನೋಡಿಕೊಳ್ಳಬೇಕು. ಈ ಕುರಿತು ರಾಜ್ಯ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಅದರಿಂದಾಗುವ ಪ್ರಾಣಹಾನಿಗೆ ನೇರ ಅಧಿಕಾರಿಗಳು ಹೊಣೆಗಾರರಾಗುತ್ತಾರೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಎಚ್ಚರಿಸಿದರು.
ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮವಾಗಿರುವುದರಿಂದ ಕೃಷಿ ಚಟುವಟಿಕೆಗಳು ಆರಂಭಗೊಳ್ಳುತ್ತಿವೆ. ಬೀಜ, ರಸಗೊಬ್ಬರ, ಕೀಟ ನಾಶಕ ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ತಿಳಿಸಿದರು.
ಈ ಬಾರಿ ಜಿಲ್ಲೆಯಲ್ಲಿ ಬಿತ್ತನೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಡಿಎಪಿ ಗೊಬ್ಬರದ ಬೇಡಿಕೆ ಹೆಚ್ಚಾಗಲಿದೆ. ಹೀಗಾಗಿ ಇದರ ಬದಲಾಗಿ ರೈತರಿಗೆ ಸಂಯುಕ್ತ ರಸಗೊಬ್ಬರ ಬಳಸಲು ಅಗತ್ಯ ಸಲಹೆಗಳನ್ನು ನೀಡಬೇಕು. ಈ ಕುರಿತು ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಸೇರಿದಂತೆ ನೀರಾವರಿ, ಲೋಕೋಪಯೋಗಿ, ಆರ್ಡಿಪಿಆರ್, ಜೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕು ತಹಶೀಲ್ದಾರರು ಭಾಗವಹಿಸಿದ್ದರು.