ಇಂಫಾಲ: ಮಣಿಪುರದಲ್ಲಿ ಮತ್ತೆ ಪ್ರತಿಭಟನೆ, ಹಿಂಸಾಚಾರ ಆರಂಭವಾಗಿದ್ದು, ಮುಂಜಾಗೃತಾ ಕ್ರಮವಾಗಿ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇಂಫಾಲ ಕಣಿವೆಯ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಬಿಷ್ಣುಪುರದಲ್ಲಿ ಸಂಪೂರ್ಣ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇಂಟರ್ ನೆಟ್ ಸೇವೆ ಸಂಪೂರ್ಣ ಸ್ಥಗಿತಗೊಂಡಿದೆ.
ಮೈತೇಯಿ ಸಮುದಾಯದ ಆರಂಬಾಯಿ ತೆಂಗೋಲ್ ಸಂಘಟನೆಯ ನಾಯಕನನ್ನು ಬಂಧಿಸಲಾಗಿದೆ ಎಂಬ ಸುದ್ದಿ ಬೆನ್ನಲ್ಲೇ ಶನಿವಾರ ತಡರಾತ್ರಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡವು. ಈ ಹಿನ್ನೆಲೆಯಲ್ಲಿ ಇಂಫಾಲ ಕಣಿವೆಯ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ತಮ್ಮ ನಾಯಕನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು ಕ್ವಾಕಿಥೆಲ್, ಉರಿಪೋಕ್ ನಲ್ಲಿ ರಸ್ತೆ ಮಧ್ಯೆ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಇಂದು ಬೆಳಿಗ್ಗೆ ಕೂಡ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ರಾಜಭವನಕ್ಕೆ ತೆರಳುವ ರಸ್ತೆಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇಂದ್ರ ಪಡೆಗಳ ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಇನ್ನು ಪ್ಂಫಾಲ ಪೂರ್ವ ಜಿಲ್ಲೆಗಳಲ್ಲಿ ಜೂನ್ 10ರಂದು ರಾತ್ರಿ 10 ಗಂಟೆಯಿಂದ ಮುಂದಿನ ಆದೇಶ ಬರುವವರೆಗೂ ಜನರು ತಮ್ಮ ಮನೆಗಳಿಂದ ಹೊರ ಹೋಗದಂತೆ ಸೂಚಿಸಲಾಗಿದೆ.