BIG NEWS: ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ: ಸುರಕ್ಷಿತವಾಗಿ ಕರೆತರುವುದಾಗಿ ಭರವಸೆ

ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದಾಗಿ ಇಸ್ರೇಲ್‌ನಲ್ಲಿ ಸಿಲುಕಿರುವ ಹಲವಾರು ಕನ್ನಡಿಗರೊಂದಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವೀಡಿಯೋ ಕರೆ ಮಾಡಿ ಸುರಕ್ಷತೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಇಸ್ರೇಲ್‌ ನಲ್ಲಿ ಸಿಲುಕಿರುವ ಕನ್ನಡಿಗರ ಜತೆ ಮಾತನಾಡಿದ ಕುಮಾರಸ್ವಾಮಿ ಸುರಕ್ಷಿತವಾಗಿ ಕರೆತರುವ ಭರವಸೆ ನೀಡಿದರು. ಮಾತುಕತೆ ಸಮಯದಲ್ಲಿ ಸಚಿವರು, ಅವರೆಲ್ಲರ ಯೋಗಕ್ಷೇಮ ವಿಚಾರಿಸಿದರು ಮತ್ತು ಭಾರತ ಸರ್ಕಾರದಿಂದ ಸಂಪೂರ್ಣ ಬೆಂಬಲದ ಭರವಸೆ ನೀಡಿದರು.

ನಮ್ಮ ಜನರು ಸುರಕ್ಷಿತವಾಗಿ ಮತ್ತು ತ್ವರಿತವಾಗಿ ತಾಯ್ನಾಡಿಗೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ವಿದೇಶಾಂಗ ಸಚಿವಾಲಯದೊಂದಿಗೆ ಈ ವಿಷಯವನ್ನು ತಕ್ಷಣವೇ ಚರ್ಚಿಸುವುದಾಗಿ ಸಚಿವರು ಹೇಳಿದರು.

ವಿಡಿಯೋ ಕರೆಯ ಮೂಲಕ ಮಾತನಾಡಿದ ಎಲ್ಲಾ ಕನ್ನಡಿಗರು, ತಾವು ಸುರಕ್ಷಿತರಾಗಿದ್ದೇವೆ ಮತ್ತು ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದ್ದಾರೆ ಎಂದು ಸಚಿವರಿಗೆ ತಿಳಿಸಿದರು. “ನಮ್ಮನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ” ಎಂದು ಸಚಿವರಿಗೆ ಮಾಹಿತಿ ನೀಡಿದರಲ್ಲದೆ, ಇದಕ್ಕಾಗಿ ರಾಯಭಾರ ಕಚೇರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಅಲ್ಲದೆ, ಸಚಿವ ಕುಮಾರಸ್ವಾಮಿ ಅವರೂ ಭಾರತೀಯ ರಾಯಭಾರ ಕಚೇರಿಯ ಸಿಬ್ಬಂದಿಯ ಪ್ರಯತ್ನಗಳನ್ನು ಶ್ಲಾಘಿಸಿದರು ಹಾಗೂ ಇಂಥ ಕಠಿಣ ಸಮಯದಲ್ಲಿ ಅಧಿಕಾರಿಗಳ ಬದ್ಧತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಸರ್ಕಾರವು ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಎಲ್ಲ ಪ್ರಯತ್ನ ಮಾಡುತ್ತಿದೆ ಎಂದು ಸಚಿವರು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read