ಉಡುಪಿ: ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಎನ್ಎಸ್ ಯುಐ ಅಕ್ಷೇಪ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಹೇಳುತ್ತಾರೆ. ಆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ, ಬೆಳ್ಳಗೆ ಇರುವುದನ್ನು ಕಪ್ಪು ಮಾಡುವುದರಲ್ಲಿ ಚಕ್ರವರ್ತಿ ಸೂಲಿಬೆಲೆ ನಿಸ್ಸೀಮರು. ವಾಕ್ ಸ್ವಾತಂತ್ರ್ಯ ಸೇರಿದಂತೆ ಎಲ್ಲಾ ರೀತಿಯ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ಕೊಟ್ಟಿದೆ. ಇಡೀ ದೇಶದ ಇತಿಹಾಸದಲ್ಲಿ ಸಂವಿಧಾನವನ್ನು ಎತ್ತಿ ಹಿಡಿದ ಪಕ್ಷ ಕಾಂಗ್ರೆಸ್ ಎಂದರು.
ನಾವು ಚಕ್ರವರ್ತಿ ಸೂಲಿಬೆಲೆ ಅವರಿಂದ ಪಾಠ ಕೇಳಬೇಕಾಗಿಲ್ಲ. ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಸೂಲಿಬೆಲೆ ಇರುವ ವಿಚಾರ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಖಂಡಿತವಾಗಿ ಸೂಲಿಬೆಲೆ ತಮ್ಮ ಪ್ರವಾಸ ಮಾಡಬಹುದು. ದ್ವೇಷದ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ. ಯಾಕೆಂದರೆ ಉಡುಪಿ ಶಾಂತಿ ಪ್ರಿಯರ ಜಿಲ್ಲೆ ಎಂದು ಹೇಳಿದರು.
ಒಂದು ಕಡೆ ಬಿಜೆಪಿ ಕೋಮುವಾದವನ್ನು ಪ್ರಚೋದನೆ ಮಾಡುತ್ತದೆ. ನಾವು ಕೋಮು ಪ್ರಚೋದನೆ ಮಾಡುತ್ತಿಲ್ಲ ಎನ್ನುತ್ತಾರೆ. ಇನ್ನೊಂದು ಕಡೆ ಕೋಮು ನಿಗ್ರಹದಳಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ. ಇಂಥ ಮನೋಭಾವನೆಯ ಬಿಜೆಪಿ ಶಾಸಕರನ್ನು ನೋಡಿದರೆ ಅವರ ಮನಸ್ಥಿತಿ ಏನು ಅನ್ನೋದು ಉಡುಪಿಯ ಜನತೆಗೆ ಅರ್ಥವಾಗುತ್ತೆ ಎಂದು ಜಿಲ್ಲೆಯ ಬಿಜೆಪಿ ಶಾಸಕರ ವಿರುದ್ಧ ಕಿಡಿ ಕಾರಿದರು.