ಮಡಿಕೇರಿ: ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ 8000 ಕೋಟಿ ರೂ. ಮೀಸಲಿಡಲಾಗಿದೆ. ಮಾರ್ಗಸೂಚಿಗಳನ್ನು ರಚಿಸಿ ಶಾಸಕರಿಗೆ ಅನುದಾನ ಹಂಚಿಕೆ ಮಾಡಲು ಸಿದ್ಧತೆ ನಡೆಯುತ್ತಿದ್ದು, ಸದ್ಯದಲ್ಲಿಯೇ ಮುಖ್ಯಮಂತ್ರಿಗಳು ಘೋಷಣೆ ಮಾಡಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಹೇಳಿದ್ದಾರೆ.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ ಅವರು ಮಳೆ ಹಾನಿ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ವೀಕ್ಷಿಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಈ ಬಾರಿ ಮೇ ಅಂತ್ಯದಲ್ಲಿಯೇ ಮುಂಗಾರು ಆರಂಭವಾಗಿದ್ದು, ಹೆಚ್ಚಿನ ಮಳೆಯಿಂದ ಜಿಲ್ಲೆಯಲ್ಲಿ ಮನೆ, ಸೇತುವೆ, ರಸ್ತೆ ಸೇರಿದಂತೆ ಹಲವು ರೀತಿಯ ಪ್ರಾಕೃತಿಕ ವಿಕೋಪ ಸಂಭವಿಸಿದೆ ಎಂದರು.
ಜಿಲ್ಲೆಯಲ್ಲಿ ಇನ್ನು ಎರಡು ತಿಂಗಳ ಕಾಲ ಹೆಚ್ಚಿನ ಮಳೆಯಾಗುವುದರಿಂದ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರ ವಹಿಸಬೇಕು ಎಂದು ಸಚಿವರು ಮನವಿ ಮಾಡಿದರು.
ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾಡಳಿತ ಗಮನಹರಿಸಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮೇ ಅಂತ್ಯದಿಂದ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆಗಳ ಹಾನಿಯಾಗಿದೆ. ಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಲಾಗುವುದು. ಮನೆ ಹಾನಿ ಸಂಬಂಧ ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು. ಮಳೆ ನಿಂತ ನಂತರ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಹಾನಿ ಬಗ್ಗೆ ಶಾಸಕರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಅವರಿಗೆ ವರದಿ ನೀಡಲಾಗುವುದು. ಮಳೆಹಾನಿಗೆ ಹೆಚ್ಚಿನ ಹಣ ಬಿಡುಗಡೆಗೆ ಮುಖ್ಯಮಂತ್ರಿ ಅವರನ್ನು ಕೋರಲಾಗುವುದು ಎಂದು ಹೇಳಿದರು.
ಸರ್ಕಾರದ ಬಳಿ ಹಣವಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅಡಚಣೆ ಇಲ್ಲ. ಸರ್ಕಾರ 8 ಸಾವಿರ ಕೋಟಿ ರೂ. ವನ್ನು ಅಭಿವೃದ್ಧಿ ಕೆಲಸಕ್ಕಾಗಿ ಬಿಡುಗಡೆ ಮಾಡಿದೆ. ಹಾಗೆಯೇ ಕೊಡಗು ಜಿಲ್ಲೆಗೂ ಸಹ 100 ಕೋಟಿ ರೂ. ಬಿಡುಗಡೆ ಮಾಡಿದೆ. ಗ್ಯಾರಂಟಿ ಯೋಜನೆ ಜೊತೆಗೆ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಸಚಿವರು ವಿವರಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್, ಕುಶಾಲನಗರ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಇತರರು ಇದ್ದರು.