ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಸ್ತಿತ್ವಕ್ಕೆ ಬಂದಿದೆ ಎನ್ನುವ ವರದಿಯನ್ನು ಮುಖ್ಯಮಂತ್ರಿಗಳ ಕಚೇರಿ ಅಲ್ಲಗಳೆದಿದೆ.
ಎಐಸಿಸಿಯಿಂದ ಅಂತಹ ಯಾವುದೇ ನೇಮಕಾತಿ ಆಗಿಲ್ಲ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ. ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಸಿದ್ದರಾಮಯ್ಯ ಕೂಡ ಒಬ್ಬರಾಗಿದ್ದಾರೆ. ಜುಲೈ 15ರಂದು ಬೆಂಗಳೂರಿನಲ್ಲಿ ಸಲಹಾ ಮಂಡಳಿಯ ಸಭೆ ಎಐಸಿಸಿ ಒಬಿಸಿ ವಿಭಾಗದ ಅಧ್ಯಕ್ಷ ಅನಿಲ್ ಜೈ ಹಿಂದ್ ನೇತೃತ್ವದಲ್ಲಿ ನಡೆಸಲಾಗುವುದು.
ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಿಕೊಂಡಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಸಭೆ ನಡೆಯಲಿದೆ. ವಿವಿಧ ರಾಜ್ಯಗಳ ಪಕ್ಷದ ಮಾಜಿ ಸಿಎಂಗಳು, ಹಾಲಿ, ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ.