ಮಂಡ್ಯ: ಪ್ರವಾಸಕ್ಕೆಂದು ಬಂದಿದ್ದಾಗ ಫೋಟೋ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಕಾವೇರಿ ನದಿಯಲ್ಲಿ ವ್ಯಕ್ತಿಯೋರ್ವ ಕೊಚ್ಚಿ ಹೋಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ನಡೆದಿದೆ.
ಮಹೇಶ್ ನದಿಯಲ್ಲಿ ಕೊಚ್ಚಿ ಹೋಗಿರುವ ಆಟೋ ಚಾಲಕ. ಮೈಸೂರಿನಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮಹೇಶ್, ತನ್ನ ಸ್ನೇಹಿತರೊಂದಿಗೆ ಕೆ.ಆರ್.ಎಸ್ ಗೆ ಆಗಮಿಸಿದ್ದರು. ಈ ವೇಳೆ ಸರ್ವಧರ್ಮ ಆಶ್ರಮದ ಬಳಿ ಸೇತುವೆ ಬಳಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಆಯತಪ್ಪಿ ನದಿಗೆ ಬಿದ್ದು, ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ನದಿಯಲ್ಲಿ ಕೊಚ್ಚಿ ಹೋಗಿರುವ ಮಹೇಶ್ ಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.