ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದ ಕಾರಣ ನೀಡಿ ರಾಜ್ಯದಲ್ಲಿ ವಿದ್ಯುತ್ ಸಂಪರ್ಕ ಮಂಜೂರಾತಿ ಕಡತ ವಿಲೇವಾರಿ ಮಾಡುತ್ತಿಲ್ಲ. ಹೀಗಾಗಿ ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿರುವ ಮೂರರಿಂದ ನಾಲ್ಕು ಲಕ್ಷ ಬಡ, ಮಧ್ಯಮ ವರ್ಗದ ಕುಟುಂಬದವರಿಗೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳುವಂತೆ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಆಯೋಗ ಶಿಫಾರಸು ಮಾಡಿದೆ.
ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ವತಿಯಿಂದ ಆಯೋಗಕ್ಕೆ ಈ ಕುರಿತು ಮನವಿ ಸಲ್ಲಿಸಲಾಗಿದ್ದು, ಮನವಿಗೆ ಸ್ಪಂದಿಸಿದ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಸಂಬಂಧಿಸಿದವರಿಗೆ ಪತ್ರ ಬರೆದಿದೆ.
ಎಸ್ಕಾಂಗಳು ಏಪ್ರಿಲ್ 4ರಿಂದ ಮನೆ, ವಾಣಿಜ್ಯ ಕಟ್ಟಡ, ಕೈಗಾರಿಕೆಗಳು ಸೇರಿ ಎಲ್ಲರಿಗೂ ತಾತ್ಕಾಲಿಕ, ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ, ಸಿಸಿ ಕಡ್ಡಾಯಗೊಳಿಸುತ್ತಿವೆ. ಇದರಿಂದ ಬಡವರಿಗೆ ವಿಶೇಷವಾಗಿ ಮಕ್ಕಳ ಶಿಕ್ಷಣ, ಗ್ರಾಮೀಣ ಪ್ರದೇಶದ ಅಭಿವೃದ್ಧಿ, ಸಣ್ಣಪುಟ್ಟ ವ್ಯಾಪಾರಸ್ಥರು, ಕೈಗಾರಿಕೋದ್ಯಮಗಳಿಗೆ ತೊಂದರೆಯಾಗಿದೆ. ಹೀಗಾಗಿ ಸಾರ್ವಜನಿಕರ ಹಿತಾಸಕ್ತಿ, ರಾಜ್ಯದ ಪ್ರಗತಿಯ ದೃಷ್ಟಿಯಿಂದ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಯೋಗದಿಂದ ಸೂಚನೆ ನೀಡಲಾಗಿದೆ.