ಅಹಮದಾಬಾದ್: ಗುಜರಾತ್ ನ ವಡೋದರಾದಲ್ಲಿ ಸೇತುವೆ ಕುಸಿದು 15 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಎಂಜಿನಯರ್ ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ವಡೋದರಾ ಜಿಲ್ಲೆಯ ಮಹಿಸಾಗರ್ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಮುಜ್ ಪುರ್-ಗಂಭೀರ್ ಸೇತುವೆ ವಾಹನಗಳು ಚಲಿಸುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದು, ದುರಂತ ಸಂಭವಿಸಿತ್ತು. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಈ ನಡುವೆ ಪ್ರಕರಣದ ಬಗ್ಗೆ ತನಿಖೆ ಆರಂಭವಾಗಿದೆ. ಅಲ್ಲದೇ ಗುಜರಾತ್ ನ ಎಲ್ಲಾ ಸೇತುವೆಗಳ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರ ಸೂಚಿಸಿದೆ.
ಈ ನಡುವೆ ಸೇತುವೆ ಕುಸಿತ ಪ್ರಕರಣದಲ್ಲಿ ನಾಲ್ವರು ಎಂಜಿನಿಯರ್ ಗಳನ್ನು ಅಮಾನತು ಮಾಡಲಾಗಿದೆ. ಆರ್&ಬಿ ವಡೋದರಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಎನ್.ಎಂ.ನಾಯಕವಾಲಾ, ಉಪ ಕಾರ್ಯನಿರ್ವಾಹಕ ಎಂಜಿನಿಯರ್ ಗಳಾದ ಯುಸಿ ಪಟೇಲ್, ಆರ್.ಟಿ.ಪಟೇಲ್ ಹಾಗೂ ಸಹಾಯಕ ಎಂಜಿನಿಯರ್ ಜೆ.ವಿ.ಶಾ ಸಸ್ಪೆಂಡ್ ಆದವರು.