ಹಾವೇರಿ: ರಾಜ್ಯದಲ್ಲಿ ಜನರ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತಿದೆ. ರಾಜ್ಯ ಸರ್ಕಾರದ ದುರಾಡಳಿತ ನೋಡಿದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಸಂಸದ ಬೊಮ್ಮಾಯಿ, ಹಾವೇರಿ ಬಿಜೆಪಿಯನ್ನು ಪ್ರಭಲವಾಗಿ ಕಟ್ಟಬೇಕೆಂದು ತೀರ್ಮಾನ ಮಾಡಿದ್ದೆವೆ ಹಾವೇರಿ ಜಿಲ್ಲೆಯ ಜನ ಸಾಗರವೇ ಬಿಜೆಪಿ ಜೊತೆ ಬರಬೇಕು. ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರ ಮಿತಿಮೀರಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಜನರ ಪರವಾಗಿ ಹೋರಾಟ ಮಾಡಿದರೆ ಜನರು ನಮ್ಮ ಜೊತೆಗೆ ನಿಲ್ಲುತ್ತಾರೆ ಎಂದರು.
ಜನರು ಬಹಳ ಎಚ್ಚರಿಕೆ ಹೊಂದಿದ್ದಾರೆ. ಕೇವಲ ಆಡಳಿತ ಪಕ್ಷಕ್ಕಷ್ಟೇ ಅಲ್ಲ. ವಿರೋಧ ಪಕ್ಷವನ್ನು ಪ್ರಶ್ನಿಸುತ್ತಾರೆ. ನಮ್ಮನ್ನೂ ಕೂಡ ಜನರು ಬಹಳ ಎಚ್ಚರಿಕೆಯಿಂದ ನೋಡುತ್ತಿದ್ದಾರೆ. ಹೀಗಾಗಿ ನಾವು ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.
ರಾಜ್ಯದಲ್ಲಿ ಈ ಸರ್ಕಾರ ಜನರ ಪಾಲಿಗೆ ಸತ್ತಿದೆ. ರೈತರ ವಿಚಾರದಲ್ಲಿ ಸಿಎಂ ಅವರಿಗೆ ತಿರಸ್ಕಾರ ಮತ್ತು ತಾತ್ಸಾರ ಇದೆ. ರೈತರಿಗೆ ಬೀಜ ಗೊಬ್ಬರ ಕೊಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಎರಡು ವರ್ಷದಿಂದ ಬೆಳೆನಾಶವಾಗಿದೆ ಒಂದು ನೈಯಾಪೈಸೆ ಬಿಡುಗಡೆ ಮಾಡಿಲ್ಲ. ನಮ್ಮ ಕಾಲದಲ್ಲಿ ಕೇಂದ್ರ ಸರ್ಕಾರ ನೀಡುವ ಹಣದ ಎರಡು ಪಟ್ಟು ಪರಿಹಾರ ನೀಡಿದ್ದೇವು. ಸುಮಾರು 7 ಸಾವಿರ ಕೋಟಿ ಪರಿಹಾರ ನೀಡಿದ್ದೇವು ಎಂದು ಹೇಳಿದರು.