ಬೆಂಗಳೂರು: ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ ವಿಚಾರ ವಿಧಾನ ಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದೆ. ಕೇರಳಕ್ಕೆ ಗೊಬ್ಬರ ಸಾಗಾಟವಾಗುತ್ತಿದೆ ಎಂದು ಶಾಸಕ ಅರವಿಂದ್ ಬೆಲ್ಲದ್ ಆರೋಪಿಸಿದ್ದಾರೆ.
ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಬೆಲ್ಲದ್, ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಂದ ರೈತರು ಪರದಾಡುತ್ತಿದ್ದಾರೆ. ಗೊಬ್ಬರ ಪೂರೈಕೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಗೊಬ್ಬರಕ್ಕಾಗಿ ರೈತರು ಸಂಕಷ್ಟ ಪಡುತ್ತಿದ್ದರೆ, ಇತ್ತ ಕೇರಳಕ್ಕೆ ಸಾಗಾಟ ಮಾಡಲಾಗುತ್ತಿದೆ. ಕೇರಳಕ್ಕೆ ಹೋಗುತ್ತಿದ್ದ ಗೊಬ್ಬರದ ಲಾರಿಯನ್ನು ನಂಜನ ಗೂಡ್ ನಲ್ಲಿ ಸೀಜ್ ಮಾಡಲಾಗಿದೆ ಎಂದು ಗುಡುಗಿದರು.
ಇದಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ ಶಾಸಕ ಅಶ್ವತ್ಥನಾರಾಯಣ, ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡಬೇಕಾದ ಯೂರಿಯಾ ಗೊಬ್ಬರದಲ್ಲಿಯೂ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ಕೆಂಡಾಮಂಡಲಾರದ ಡಿಸಿಎಂ ಡಿ.ಕೆ.ಶಿವಕುಮಾರ್, ಭ್ರಷ್ಟಾಚಾರ ಮಾಡಿದ್ದು ಯಾರು, ನೀವು ಭ್ರಷ್ಟಾಚಾರಿಗಳು ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಗದ್ದಲ ಗಲಾಟೆ ತಾರಕಕ್ಕೇರಿದ್ದು, ಸ್ಪೀಕರ್ ಯು.ಟಿ.ಖಾದರ್ ಕೆಲಕಾಲ ಕಲಾಪವನ್ನು ಮುಂದೂಡಿದ ಪ್ರಸಂಗವೂ ನಡೆಯಿತು.