ಕಲಬುರಗಿ: ಬೆಳೆ ಹಾನಿ ಹಿನ್ನೆಲೆಯಲ್ಲಿ ರೈತರು ಸಾಲಮನ್ನಾ ಮಾಡುವಂತೆ ಕೇಳುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬೆಳೆಹಾನಿ ಹಿನ್ನೆಲೆಯಲ್ಲಿ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ. ವಾರದಲ್ಲಿ ಜಂಟಿ ಸಮೀಕ್ಷೆಯ ಅಂತಿಮ ವರದಿ ಬಂದ ಬಳಿಕ ಬೆಳೆ ಹಾನಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಈ ಬಾರಿ ಉತ್ತಮ ಮಳೆಯಾಗಿದ್ದು, ಉತ್ತಮ ಬೆಳೆಗಳ ನಿರೀಕ್ಷೆಯಿತ್ತು. ಆದರೆ, ಯಾದಗಿರಿ, ಕಲಬುರಗಿ, ಬೀದರ್ ಸೇರಿ ಹಲವು ಕಡೆ ಬೆಳೆ ಹಾನಿಯಾಗಿದೆ. ಕಳೆದ ಬಾರಿ ಬೆಳೆ ಹಾನಿ ಬಗ್ಗೆ ವರದಿ ಕಳಿಸಿದಾಗ ಕೇಂದ್ರ ಸರ್ಕಾರ ಪರಿಹಾರ ನೀಡಿರಲಿಲ್ಲ. ನಾವು ಸುಪ್ರೀಂ ಕೋರ್ಟ್ ಗೆ ಹೋಗಿ ಪರಿಹಾರ ಪಡೆದುಕೊಂಡೆವು. ಈ ಬಾರಿ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಆರೋಪಿಸಿದ್ದಾರೆ. ಬೆಳೆ ಹಾನಿ ಹಿನ್ನೆಲೆಯಲ್ಲಿ ರೈತರು ಸಾಲಮನ್ನಾ ಬಗ್ಗೆ ಮನವಿ ಮಾಡಿರುವುದು ಗಮನದಲ್ಲಿದ್ದು, ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.