ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿ ಗಣತಿಯಲ್ಲಿ ಭಾಗವಹಿಸುವ ಶಿಕ್ಷಕರಿಗೆ ಕಡಿತವಾಗುವ ದಸರಾ ರಜೆ ದಿನಗಳನ್ನು ಪರ್ಯಾಯ ರೀತಿಯಲ್ಲಿ ಒದಗಿಸುವ ಕುರಿತು ಚಿಂತನೆ ನಡೆಸುವುದಾಗಿ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ದಸರಾ ರಜಾ ಅವಧಿಯಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳುವುದು ಅನಿವಾರ್ಯವಾಗಿದೆ. ಶಾಲಾ ಅವಧಿಯಲ್ಲಿ ಶಿಕ್ಷಕರನ್ನು ಸಮೀಕ್ಷೆ ಕಾರ್ಯಕ್ಕೆ ಬಳಸಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ.
ಸರ್ಕಾರದ ಆದೇಶದಂತೆ ಅ.7ರವರೆಗೆ ಶಿಕ್ಷಕರು ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ. ಸಮೀಕ್ಷೆ ಕಾರ್ಯಕ್ಕಾಗಿ ಅವರಿಗೆ ಸರ್ಕಾರ ವಿಶೇಷ ಸಂಭಾವನೆ ನೀಡಲಿದೆ. ಸಮೀಕ್ಷೆಯಲ್ಲಿ ಭಾಗವಹಿಸುವ ಶಿಕ್ಷಕರಿಗೆ ಕಡಿತವಾಗುವ ರಜೆ ದಿನಗಳನ್ನು ಬೇರೆಯ ದಿನಗಳಲ್ಲಿ ಪರ್ಯಾಯವಾಗಿ ಕೊಡಲು ಸಾಧ್ಯವಿದೆಯೇ ಎನ್ನುವ ಬಗ್ಗೆ ಪರಿಶೀಲಿಸಲಾಗುತ್ತದೆ. ಅಂತಹ ಚಿಂತನೆ ರಾಜ್ಯ ಸರ್ಕಾರದ ಮುಂದಿದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.