ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ವೊಂದು ರಸ್ತೆ ಬದಿ ಪಲ್ಟಿಯಾಗಿ ಬಿದ್ದ ಪರಿಣಾಮ ಪ್ರಯಾಣಿಕರೊಬ್ಬರ ಕಾಲು ಮುರಿದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಅಪಘಾತದಲ್ಲಿ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಯಚೂರು ನಗರ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ಈ ಘಟನೆ ನಡೆದಿದೆ. ದಾವಣಗೆರೆಯಿಂದ ರಾಯಚೂರುಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ನಿದ್ದೆ ಮಂಪರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಬಸ್ ಪಲ್ಟಿಯಾದ ಪರಿಣಾಮ ಪ್ರಯಾಣಿಕ ವಿಶ್ವನಾಥ್ ಎಂಬುವವರ ಕಾಲು ಮುರಿದಿದ್ದು, ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.