ಕಲಬುರಗಿ: ವರುಣಾರ್ಭಟಕ್ಕೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳು ತ್ತತ್ತರಿಸಿ ಹೋಗಿವೆ. ರೈತರ ಬದುಕಂತು ಮೂರಾಬಟ್ಟೆಯಾಗಿದೆ. ಜನ-ಜಾನುವಾರುಗಳ ಸ್ಥಿತಿ ಸಂಕಷ್ಟಕ್ಕೆ ಸಿಲುಕಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಕ್ಷಣ ಕ್ಷಣಕ್ಕೂ ನದಿಗಳು ಅಪಾಯದಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು, ಪ್ರವಾಹದ ಅಬ್ಬರಕ್ಕೆ ನಲುಗುವಂತಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ಮಳೆ ಕೋಲಾಹಲ ಸೃಷ್ಟಿಸಿದ್ದು, ಪ್ರಹಾವದಲ್ಲಿ ಜಾನುವಾರುಗಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಚಿಂಚೋಳಿ ತಾಲೂಕಿನ ಚಂದ್ರಪಳ್ಳಿ ಡ್ಯಾಂ ಭರ್ತಿಯಾಗಿದ್ದು, ಹೆಚ್ಚಿನ ನೀರನ್ನು ಭೀಮಾನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಚಂದ್ರಪಳ್ಳಿ ಜಲಾಶಯದಿಂದ ಅಪರಾಪ್ರಮಾಣದಲ್ಲಿ ನೀರು ಹರಿ ಬಿದಲಾಗುತ್ತಿದೆ. ಇದರಿಂದಾಗಿ ಗ್ರಾಮಗಳಿಗೂ ನೀರು ನುಗ್ಗಿದ್ದು, ಜಮೀನುಗಳು ಮುಳುಗಡೆಯಾಗಿವೆ. ಗ್ರಾಮಸ್ಥರು ಮನ್ರೆಗಳನ್ನು ತೊರೆದು ಸುರಕ್ಷಿತ ಪ್ರದೇಶದತ್ತ ತೆರಳುತ್ತಿದ್ದಾರೆ. ಈ ನಡುವೆ ನೋಡ ನೋಡುತ್ತಿದ್ದಂತೆ ನದಿ-ಹಳ್ಳಗಳು ತುಂಬಿ ಹರಿದಿದ್ದು, ಪ್ರವಾಹದ ಅಬ್ಬರಕ್ಕೆ ಸಿಲುಕಿದ ಮೂರು ಜಾನುವಾರುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.
ಕಲಬುರಗಿ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.