ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕಾಗಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡು ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ ಕೊನೆಯ ವಾರ ಪಶ್ಚಿಮ ಕರಾವಳಿ ಪ್ರವೇಶಿಸಿದ್ದ ಮುಂಗಾರು ಮಾರುತಗಳು ವಾಪಸ್ ಆಗುತ್ತಿವೆ. ಹೀಗಾಗಿ ಒಡಿಶಾದಿಂದ ರಾಜ್ಯದವರೆಗೆ ಮಳೆ ಮಾರುತಗಳು ವ್ಯಾಪಕವಾಗಿರುವ ಪರಿಣಾಮ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಭಾರಿ ಮಳೆಯಾಗುವ ಸಂಭವವಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಗುರುವಾರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಶುಕ್ರವಾರ ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.