ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿ ಮತ್ತು ನೆರೆ ಹಾವಳಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಪಾವತಿ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ 30 ದಿನಗಳಲ್ಲಿ ಎಲ್ಲಾ ಸಂತ್ರಸ್ತ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಹಣ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಮುಂಗಾರಿನಿಂದ ಸುಮಾರು 12.54 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಈ ನಷ್ಟಕ್ಕೆ ಸುಮಾರು 2000 ಕೋಟಿ ರೂ. ಪರಿಹಾರ ಪಾವತಿ ಪ್ರಕ್ರಿಯೆ ನಡೆದಿದೆ ಎಂದು ಹೇಳಿದ್ದಾರೆ.
ಸೆಪ್ಟೆಂಬರ್ ಮೊದಲ ವಾರದವರೆಗೆ ಭಾರಿ ಮಳೆಯಿಂದ 5.29 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿತ್ತು. ಬೆಳೆ ಹಾನಿಗೆ ಪರಿಹಾರ ಪಾವತಿಸಲು ಸಿದ್ಧತೆ ನಡೆದಿತ್ತು. ಸೆಪ್ಟೆಂಬರ್ ಅಂತ್ಯದಲ್ಲಿ ಸುರಿದ ಭಾರಿ ಮಳೆ ಮತ್ತು ಭೀಮಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ನೆರೆಹಾವಳಿ ಉಂಟಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ 7.24 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ಹೀಗಾಗಿ ನಾಲ್ಕು ಜಿಲ್ಲೆಗಳಲ್ಲಿ ಬೆಳೆ ಹಾನಿ ಜಂಟಿ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಂಡಿದ್ದು, 10 ದಿನದಲ್ಲಿ ಪೂರ್ಣಗೊಳ್ಳಲಿದೆ. ರೈತರಿಗೆ ಪರಿಹಾರ ಪಾವತಿ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ 30 ದಿನಗಳಲ್ಲಿ ಎಲ್ಲಾ ಸಂತ್ರಸ್ತ ರೈತರ ಬ್ಯಾಂಕ್ ಖಾತೆಗೆ ಪರಿಹಾರದ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.