ಮೈಸೂರು: ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಮಾಡಿ ಹತ್ಯೆ ಮಾಡುತ್ತಿದ್ದ ಜಾಲ ಪತ್ತೆಯಾಗಿದ್ದು ಓರ್ವ ಮಹಿಳೆ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ತಾಲೂಕು ಮೆಲ್ಲಹಳ್ಳಿ ಗ್ರಾಮದ ಸಮೀಪ ಹನುಗನಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಐಷಾರಾಮಿ ಬಂಗಲೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಮಾಡಲಾಗುತ್ತಿತ್ತು. ಈ ಬಂಗಲೆಗೆ ಗರ್ಭಿಣಿಯರನ್ನು ಕರೆತಂದು ಅವರ ಹೊಟ್ಟೆಯಲ್ಲಿದ್ದ ಭ್ರೂಣಲಿಂಗ ಪತ್ತೆ ಮಾಡಲಾಗುತ್ತಿತ್ತು. ಹೆಣ್ಣು ಅಥವಾ ಗಂಡು ಎಂದು ಪತ್ತೆ ಮಾಡಿ ಹೆಣ್ಣು ಭ್ರೂಣಗಳನ್ನು ಹತ್ಯೆ ಮಾಡಲಾಗುತ್ತಿತ್ತು. ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಮನೆಯಲ್ಲಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಡೈರಿ ಎಂದು ಪತ್ತೆಯಾಗಿದ್ದು, ಲಕ್ಷಾಂತರ ವಹಿವಾಟು ನಡೆದಿದೆ. ಭ್ರೂಣಲಿಂಗ ಪತ್ತೆಗಾಗಿ 25,000 ರೂ., ಹೆಣ್ಣು ಭ್ರೂಣ ಹತ್ಯೆಗೆ 30 ಸಾವಿರ ರೂಪಾಯಿ ನಿಗದಿ ಮಾಡಿದ್ದರು. ಮನೆಯಲ್ಲಿದ್ದ ಲಾಕರ್ ನಲ್ಲಿ ಮೂರು ಲಕ್ಷಕ್ಕೂ ಅಧಿಕ ನಗದು ಪತ್ತೆಯಾಗಿದೆ. ಭ್ರೂಣ ಹತ್ಯೆಗೆ ಬಳಸುತ್ತಿದ್ದ ಕಿಟ್ ಗಳು, ಔಷಧಗಳು ಸೇರಿ ಎಲ್ಲ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಡಿಡಿ ವಿವೇಕ್ ದೊರೆ, ಮಂಡ್ಯ ಡಿಹೆಚ್ಒ ಮೋಹನ್, ಮೈಸೂರು ಡಿಹೆಚ್ಒ ಕುಮಾರಸ್ವಾಮಿ, ಮಂಡ್ಯ ಕುಟುಂಬ ಕಲ್ಯಾಣ ಅಧಿಕಾರಿ ಬೆಟ್ಟಸ್ವಾಮಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಆರೋಪಿಗಳ ಕೃತ್ಯ ಬಯಲಿಗೆಳೆಯಲು ಗರ್ಭಿಣಿಯೊಬ್ಬರ ಸಹಾಯ ಪಡೆಯಲಾಗಿದೆ. ವರುಣ ಠಾಣೆ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಓರ್ವ ಮಹಿಳೆ ಸೇರಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆ ವೇಳೆ ಇಬ್ಬರು ಗರ್ಭಿಣಿಯರು ಭ್ರೂಣ ಲಿಂಗ ಪತ್ತೆಗೆ ಆಗಮಿಸಿದ್ದರು. ಅವರನ್ನು ಕೂಡ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.