ಮೈಸೂರು: ಕಾಂಗ್ರೆಸ್ ನಲ್ಲಿ ಮುಂದಿನ ನಾಯಕತ್ವ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಯತೀಂದ್ರ ಸಿದ್ದರಾಮಯ್ಯ, ನನ್ನ ಹೇಳಿಕೆಯನ್ನು ಬೇರೆ ರೀತಿ ಬಿಂಬಿಸಲಾಗುತ್ತಿದೆ ಎಂದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನನ್ನ ಹೇಳಿಕೆಯನ್ನು ಅನಗತ್ಯವಾಗಿ ಡ್ರ್ಯಾಗ್ ಮಾಡಲಾಗುತ್ತಿದೆ. ನಾನು ಆ ಬಗ್ಗೆ ಏನು ಸ್ಪಷ್ಟನೆ ಕೊಡಬೇಕೋ ಈಗಾಗಲೇ ಕೊಟ್ಟಿದ್ದೇನೆ ಎಂದರು.
ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ನಾನು ಯಾವುದೇ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ. ನನ್ನ ಹೇಳಿಕೆಯಲ್ಲಿ ತಪ್ಪೇನೂ ಇಲ್ಲ. ಆದರೆ ನನ್ನ ಹೇಳಿಕೆಯನ್ನು ಬೇರೆ ರೀತಿ ಬಿಂಬಿಸಲಾಗುತ್ತಿದೆ ಎಂದು ಹೇಳಿದರು. ನಾನು ಏನು ಹೇಳಬೇಕೋ ಅದನ್ನು ಹೇಳಿಯಾಗಿದೆ. ಅನಗತ್ಯವಾಗಿ ಮತ್ತೆ ಮತ್ತೆ ಅದನ್ನೇ ಮಾತನಾಡಿ ವಿವಾದ ಸೃಷ್ಟಿ ಮಾಡುವುದಿಲ್ಲ. ಈ ವಿಚಾರದ ಬಗ್ಗೆ ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ. ಪಕ್ಷದ ಆಂತರಿಕ ವಿಚಾರವನ್ನು ಪಕ್ಷದ ಒಳಗೆ ಮಾತನಾಡುತ್ತೇನೆ. ಮಾಧ್ಯಮಗಳ ಮುಂದೆ ಮಾತನಾಡಲ್ಲ ಎಂದಿದ್ದಾರೆ.
ಈಗಿನ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಯಾವುದೂ ಇಲ್ಲ ಎಂದು ಹೇಳಿದರು.
