ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: 1 ಕೋಟಿಯಷ್ಟು ಅಕ್ರಮ ಮನೆ, ನಿವೇಶನ ಸಕ್ರಮಗೊಳಿಸಲು ಇ-ಸ್ವತ್ತು ವಿತರಣೆ

ಬೆಂಗಳೂರು: ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇ-ಸ್ವತ್ತು ಸಮರ್ಪಕ ಅನುಷ್ಠಾನ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಈ ಕುರಿತು ಹೊಸದಾಗಿ ಬಿಡುಗಡೆ ಮಾಡಿರುವ ನಿಯಮಾವಳಿಗಳ ಕುರಿತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿವಳಿಕೆ ನೀಡಲು ಜಿಲ್ಲಾ ಮಟ್ಟದಲ್ಲಿ ವಿಶೇಷ ತರಬೇತಿ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ತೆಕ್ಕೆಗೆ ತರುವ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ತಿಳಿಸಲಾಗಿದೆ.

ರಾಜ್ಯದ ಲಕ್ಷಾಂತರ ಮಂದಿ ಈ ಯೋಜನೆಯ ಪ್ರಯೋಜನ ಪಡೆಯಲು ತವಕದಿಂದ ಕಾಯುತ್ತಿದ್ದು, ಸಾರ್ವಜನಿಕರಿಗೆ ಸುಗಮ ಹಾಗೂ ಪಾರದರ್ಶಕವಾಗಿ ಇ–ಸ್ವತ್ತು ಪ್ರಯೋಜನ ದೊರೆಯುವಂತೆ ಸಿಬ್ಬಂದಿಯನ್ನು ಸಜ್ಜು ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವನ್ನು ಪಡೆದು ಇ-ಸ್ವತ್ತು ಆಂದೋಲನವನ್ನು ಯಶಸ್ವಿಗೊಳಿಸಬೇಕೆಂದು ನಿರ್ದೇಶನ ನೀಡಲಾಗಿದೆ.

ಗ್ರಾಮ ಪಂಚಾಯತಿಗಳ ಸಂಪನ್ಮೂಲವನ್ನು ವೃದ್ಧಿಸುವ ಮೂಲಕ ಸ್ಥಳೀಯ ಸರ್ಕಾರಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ (ಲೀಪ್)‌ ಅಡಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಲಭ್ಯವಿರುವ ಆಸ್ತಿಗಳನ್ನು ಪತ್ತೆ ಮಾಡಿ, ಅಂತಹ ಸ್ಥಳದಲ್ಲಿ ಪಂಚಾಯತಿಗಳಿಗೆ ಶಾಶ್ವತ ಆದಾಯ ತಂದು ಕೊಡುವ ಕಟ್ಟಡಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು. ಪ್ರವಾಸಿ ತಾಣಗಳು ಹಾಗೂ ಯಾತ್ರಾಸ್ಥಳಗಳ ಸಮೀಪ ಲಭ್ಯವಿರುವ ಗ್ರಾಮ ಪಂಚಾಯತಿ ಆಸ್ತಿಗಳಲ್ಲಿ ಸಂಪನ್ಮೂಲ ಹೆಚ್ಚಿಸುವ ಯೋಜನೆಗಳನ್ನು ರೂಪಿಸಿದ್ದಲ್ಲಿ ಸರ್ಕಾರ ಅನುದಾನ ನೀಡಲಿದೆ ಎಂದು ತಿಳಿಸಲಾಗಿದೆ. 

ಸಾರ್ವಜನಿಕರು ನೀಡುವ ದೂರುಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಪ್ರಾಮಾಣಿಕ ಪ್ರಯತ್ನ ನಡೆಸಿ, ಕೆಳ ಹಂತದ ಅಧಿಕಾರಿಗಳಿಂದ ದೂರುಗಳ ಸ್ಥಿತಿ-ಗತಿಗಳ ಬಗ್ಗೆ ವಿವರಗಳನ್ನು ಪಡೆಯಬೇಕು. ಸಮಸ್ಯೆ ಬಗೆಹರಿದ ನಂತರ ದೂರುದಾರರಿಗೆ ಉತ್ತರ ನೀಡುವ ಪರಿಪಾಠ ಬೆಳೆಸಿಕೊಳ್ಳುವಂತೆ ಸಲಹೆ ನೀಡಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read