ಬೆಂಗಳೂರು: ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ದಿನಾಂಕ ನಿಗದಿಗೊಳಿಸಲಾಗಿದೆ. ನವೆಂಬರ್ 11ರಂದು ಮರು ಮತ ಎಣಿಕೆ ನಡೆಯಲಿದೆ.
ಈ ಸಂಬಂಧ ಕೋಲಾರ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಪತ್ರ ಬರೆದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್ ನ ಕೆ.ವೈ. ನಂಜೇಗೌಡ 248 ಮತಗಳ ಅಂತರದಿಂದ ಜಯಗಳಿಸಿದ್ದರು. ಮತ ಎಣಿಕೆ ವೇಳೆ ನಿಯಮ ಉಲ್ಲಂಘಿಸಲಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಕೆ.ಎಸ್. ಮಂಜುನಾಥಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಫಲಿತಾಂಶ ರದ್ದುಗೊಳಿಸಿತ್ತು. ಈ ಆದೇಶದ ವಿರುದ್ಧ ನಂಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್ ಮರು ಮತ ಎಣಿಕೆಗೆ ಸೂಚಿಸಿ ಮುಚ್ಚಿದ ಲಕೋಟೆಯಲ್ಲಿ ಮರು ಮತ ಎಣಿಕೆ ಫಲಿತಾಂಶದ ಮಾಹಿತಿ ನೀಡುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಮರು ಮತ ಎಣಿಕೆಗೆ ನವೆಂಬರ್ 11ರ ದಿನಾಂಕ ನಿಗದಿಗೊಳಿಸಲಾಗಿದೆ.
