ಕಾರವಾರ: ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ತಾತ್ಕಾಲಿಕವಾಗಿ ಅಳವಡಿಸಿದ್ದ ಲಿಫ್ಟ್ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪ್ರಭಾಕರ್ ಮುತ್ತಪ್ಪ ಶೆಟ್ಟಿ, ಬಾಬಣ್ಣ ಪೂಜಾರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮುರ್ಡೇಶ್ವರದ ಓಲಗ ಮಂಟಪದ ಸಮೀಪ ನಾಲ್ಕು ಮಹಡಿಗಳ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ತಾತ್ಕಾಲಿಕ ಲಿಫ್ಟ್ ಅಳವಡಿಸಲಾಗಿತ್ತು. ಅತಿ ಭಾರವಾದ ಕಾರಣ ಏಕಾಏಕಿ ಹಗ್ಗ ತುಂಡಾಗಿ ಲಿಫ್ಟ್ ನೆಲಕ್ಕೆ ಕುಸಿದಿದೆ. ಅದರಲ್ಲಿದ್ದ ಇಬ್ಬರು ಕಾರ್ಮಿಕರು ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
