ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ, ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ನ್ನು ಅಡ್ಡಗಟ್ಟಿ ಅದನ್ನು ಕೆಡವಿ ಬೆಂಕಿ ಹಚ್ಚಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಧೋಳದ ಸಮೀರವಾಡೆ ಗೋಧಾವರಿ ಕಾರ್ಖಾನೆ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರು ಕಾರ್ಖಾನೆ ಮಾಲೀಕರು ಮಾತುಕತೆಗೆ ಬಾರದೇ ಇರುವ ಕಾರಣಕ್ಕೆ ಗರಂ ಆಗಿರುವ ರೈತರು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿದ್ದಾರೆ. ಕಾರ್ಖಾನೆಗೆ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ನನ್ನು ರಸ್ತೆ ಮಧ್ಯೆಯೇ ತಡೆದ ಕಬ್ಬು ಬೆಳೆಗಾರರು, ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಟ್ರ್ಯಾಕ್ಟರ್ ನ್ನು ಉರುಳಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ.
ಟನ್ ಕಬ್ಬಿಗೆ 3500 ರೂಪಾಯಿ ನಿಗದಿ ಮಾಡಲೇಬೇಕು ಎಂದು ಆಗ್ರಹಿಸಿ ರೈತರು ಮುಧೋಳದಲ್ಲಿ ಹೋರಾಟ ಮುಂದುವರೆಸಿದ್ದು, ರೈತರ ಪ್ರತಿಭಟನೆ ಕ್ಷಣ ಕ್ಷಣಕ್ಕೂ ತೀವ್ರಗೊಳ್ಳುತ್ತಿದೆ. ಸರ್ಕಾರ ಟನ್ ಕಬ್ಬಿಗೆ 3300 ರೂಪಾಯಿ ನೀಡಲು ಒಪ್ಪಿದರೂ ಈ ಭಾಗದ ರೈತರು ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ನಿಗದಿಗಾಗಿ ಪಟ್ಟು ಹಿಡಿದಿದ್ದಾರೆ.
