ಬೆಳಗಾವಿ: ಸರ್ಕಾರದ ವಿರುದ್ಧ ನಾಳೆ ಬೆಳಗಾವಿಯಲ್ಲಿ ಬೃಹತ್ ಹೋರಾಟ ನಡೆಯಲಿದೆ. ರೈತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ ನಾಳೆ ಸರ್ಕಾರದ ವಿರುದ್ಧ 20 ಸಾವಿರಕ್ಕೂ ಹೆಚ್ಚು ರೈತರನ್ನು ಸೇರಿಸಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ನಿರ್ಲಕ್ಷ ಮಾಡುತ್ತಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದರು.
ಸರ್ಕಾರ ಕಬ್ಬು ಬೆಳೆಗಾರರು, ಮೆಕ್ಕೆಜೋಳ, ಭತ್ತ, ತೊಗರಿ ಬೆಳೆಗಾರರಿಗೆ ಅನ್ಯಾಯ ಮಾಡಿದೆ. ನಾಳೆ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಸರ್ಕಾರ ಕಣ್ಣಿದ್ದು ಕಾಣದವರಂತೆ, ಕಿವಿಯಿದ್ದು ಕುರುಡರಂತೆ ವರ್ತಿಸುತ್ತಿದೆ. ರೈತರಿಗೆ ಪರಿಹಾರದ ವಿಚಾರವಾಗಿ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುತ್ತಿದೆ. ಸಿಎಂ ಪರಿಹಾರ ಕೊಡುತ್ತಾರೆ ಎಂದು ರೈತರು ಕಾಯುತ್ತಿದ್ದಾರೆ. ಸರ್ಕಾರದ ಖಜಾನೆಗೆ ಬರುತ್ತಿರುವ ದುಡ್ಡು ಎಲ್ಲಿ ಹೋಗುತ್ತಿದೆ? ಎಂದು ಪ್ರಶ್ನಿಸಿದರು.
