ರಾಮನಗರ: ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದ ಜನರಿಗೆ ದಿನಸಿ ಕಿಟ್ ವಿತರಿಸಲು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ. ಈಗಾಗಲೇ ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ರಾಮನಗರದ ಮಂಜುನಾಥ ಕನ್ವೆನ್ಷನ್ ಹಾಲ್ ನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರೊಂದಿಗೆ ಕಿಟ್ ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
1.20 ಲಕ್ಷ ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಲಾಗುವುದು. ಚನ್ನಪಟ್ಟಣ ಮತ್ತು ರಾಮನಗರ ಕ್ಷೇತ್ರಗಳಲ್ಲಿ ವಿತರಣೆ ಕಾರ್ಯ ಈಗಾಗಲೇ ಆರಂಭವಾಗಿದೆ. ನಿಖಿಲ್ ಮದುವೆಗಾಗಿ ಖರ್ಚು ಮಾಡಬೇಕಿದ್ದ ಹಣದಲ್ಲಿ ಬಡವರಿಗೆ ದಿನಸಿ ಸಾಮಗ್ರಿ ವಿತರಿಸಲಾಗುತ್ತಿದೆ. ಸುಮಾರು ಐದೂವರೆ ಕೋಟಿ ರೂ. ವೆಚ್ಚದ ಸಾಮಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ.
ಈ ವೇಳೆ ಮಾತನಾಡಿದ ಹೆಚ್.ಡಿ.ಕೆ., ಸರ್ಕಾರ ರಾಜ್ಯದ ಎಲ್ಲ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಮನೆ ಬಾಡಿಗೆ, ವಿದ್ಯುತ್ ಬಿಲ್, ಶಾಲಾ ಶುಲ್ಕ ಪಾವತಿಗೆ ವಿನಾಯಿತಿ ನೀಡಬೇಕು. ಬಡವರ ಪರವಾಗಿ ಯೋಜನೆ ರೂಪಿಸಬೇಕು ಎಂದು ಹೇಳಿದ್ದಾರೆ.