ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರಕ್ಕೆ ಒಂದು ವರ್ಷ ತುಂಬಿರುವಾಗಲೇ ಭಿನ್ನಮತ ಭುಗಿಲೆದ್ದಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಕೆಲ ಶಾಸಕರುಗಳು ತಮಗೆ ನೀಡಲಾಗಿದ್ದ ನಿಗಮ – ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ಆರಂಭವಾಗಿದ್ದು, ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ವ್ಯವಸ್ಥಿತ ತಂತ್ರ ನಡೆಯುತ್ತಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಇದಕ್ಕೆ ಪೂರಕವೆಂಬಂತೆ ಯಡಿಯೂರಪ್ಪನವರ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ಬಹುತೇಕ ಪ್ರಮುಖ ನಾಯಕರು ಒಂದು ಅಭಿನಂದನೆಯನ್ನೂ ಹೇಳಲಿಲ್ಲ ಎಂಬುದು ಗಮನಾರ್ಹ.
ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನದಿಂದಲೂ ಸತತ ಸವಾಲುಗಳನ್ನು ಎದುರಿಸಿಕೊಂಡು ಬಂದಿದ್ದು, ತಮ್ಮ ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ನಾಯಕರ ಒಪ್ಪಿಗೆ ಪಡೆಯಲು ಸರ್ಕಸ್ ಮಾಡಬೇಕಾಯಿತು. ಇದರ ಮಧ್ಯೆ ರಾಜ್ಯದಲ್ಲಿ ತಲೆದೋರಿದ್ದ ನೆರೆ ಪರಿಸ್ಥಿತಿ ನಿಭಾಯಿಸಲು ಹೆಣಗಾಡಬೇಕಾಯಿತು. ಕೊನೆಗೂ ಸಂಪುಟ ವಿಸ್ತರಣೆಯಾಯಿತಾದರೂ ಯಡಿಯೂರಪ್ಪನವರಿಗೆ ಇಷ್ಟವಿಲ್ಲದಿದ್ದರೂ ಮೂವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕಾಯಿತು.
ಅದಾದ ಬಳಿಕವೂ ಯಡಿಯೂರಪ್ಪನವರ ಕೈ ಕಟ್ಟಿ ಹಾಕುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ನಿರಂತರವಾಗಿ ಮಾಡಿಕೊಂಡು ಬಂದಿದ್ದು, ರಾಜ್ಯಸಭಾ ಚುನಾವಣೆಯಲ್ಲಿ ಯಡಿಯೂರಪ್ಪನವರು ಸೂಚಿಸಿದ್ದ ಅಭ್ಯರ್ಥಿಗಳನ್ನು ಕಡೆಗಣಿಸಲಾಯಿತು. ಆದರೆ ನಂತರ ನಡೆದ ವಿಧಾನ ಪರಿಷತ್ ಚುನಾವಣೆ ಹಾಗೂ ನಾಮನಿರ್ದೇಶನದ ಸಂದರ್ಭದಲ್ಲಿ ಯಡಿಯೂರಪ್ಪನವರು ಪಟ್ಟು ಹಿಡಿದು ತಮಗೆ ಬೇಕಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು.
ಆದರೆ ಇದು ಬಿಜೆಪಿ ಹೈಕಮಾಂಡ್ ಕಣ್ಣು ಕೆಂಪಗಾಗಿಸಿದೆ ಎನ್ನಲಾಗಿದ್ದು, ಹೀಗಾಗಿ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ನಡೆಯುತ್ತಿರುವ ಪ್ರಯತ್ನಗಳಿಗೆ ಪರೋಕ್ಷ ಬೆಂಬಲ ನೀಡಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಹೇಳಲಾಗುತ್ತಿದೆ. ಆದರೆ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿರುವ ಯಡಿಯೂರಪ್ಪನವರನ್ನು ಕುರ್ಚಿಯಿಂದ ಕೆಳಗಿಳಿಸುವುದು ಅಷ್ಟು ಸುಲಭವಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಕೊರೊನಾ ಸಂಕಷ್ಟದ ಸಮಯದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ಸಾರ್ವಜನಿಕರಲ್ಲಿ ಆಕ್ರೋಶವನ್ನುಂಟು ಮಾಡಿದೆ.