ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ಅಧಿಕಾರ ಇದ್ದಾಗ ಮೇಕೆದಾಟು ಯೋಜನೆಗಾಗಿ ಏನೂ ಮಾಡಿಲ್ಲ. ಈಗ ಪಾದಯಾತ್ರೆ ಮೂಲಕ ಜನರಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಕಾಂಗ್ರೆಸ್ ನಾಯಕರಿಗೆ ಪಾದಯಾತ್ರೆ ಮಾಡುವ ನೈತಿಕತೆ ಇಲ್ಲ. ರಾಜ್ಯದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆ ವಿಚಾರವಾಗಿ ಯಾವುದೇ ಕೆಲಸವನ್ನೂ ಮಾಡಿಲ್ಲ. ಈಗ ರಾಜಕೀಯ ಹಿತಾಸಕ್ತಿಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಇವರ ಪಾದಯಾತ್ರೆಯಿಂದ ಯಾವುದೇ ಉಪಯೋಗವಾಗುತ್ತಿಲ್ಲ ಬದಲಿಗೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಪಾದಯಾತ್ರೆಯಿಂದಾಗಿ ಬೆಂಗಳೂರಿಗರಿಗೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಜನತೆ ಟ್ರಾಫಿಕ್ ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ. ಕಾಂಗ್ರೆಸ್ ನಿಂದ ತೊಂದರೆಯಾಗುತ್ತಿದೆ ಬಿಟ್ಟರೆ ಯಾವುದೇ ಉಪಯೋಗವಿಲ್ಲ ಎಂದರು.