ಮಹಿಳೆಯರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಗೆ ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಅವರು ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ ಆಶ್ರಮ, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸ್ವಯಂ ಸೇವಾ ಸಂಸ್ಥೆಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಸ್ತ್ರೀಶಕ್ತಿ ಸಂಘಗಳು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಲು ಅನುಕೂಲವಾಗುವಂತೆ ಇದೇ ಪ್ರಥಮ ಬಾರಿಗೆ ಆಯವ್ಯಯದಲ್ಲಿ 1.5 ಲಕ್ಷ ರೂ.ಗಳ ಆರ್ಥಿಕ ನೆರವು, ಆ್ಯಂಕರ್ ಬ್ಯಾಂಕ್ ಜೋಡಣೆ, ಯಂತ್ರೋಪಕರಣ,ಪ್ರಾಜೆಕ್ಟ್ ಗಳು, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಮಾಡಲಾಗುವುದು. ಅಮೆಜಾನ್ ನಂತಹ ಆನ್ಲೈನ್ ವೇದಿಕೆಗಳಲ್ಲಿ ಈ ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗುವುದು. ಪ್ರಾಯೋಗಿಕವಾಗಿ ಎಲಿವೇಟ್ ಕಾರ್ಯಕ್ರಮ ಪ್ರಾರಂಭಿಸಿದ್ದು, ಒಂದು ಸ್ತ್ರೀಶಕ್ತಿ ಸಂಘ ತಿಂಗಳಿಗೆ ಸುಮಾರು 50 ಲಕ್ಷ ವಹಿವಾಟನ್ನು ಮಾಡುತ್ತಿದೆ. ಇದು ಸಂಘಟಿತವಾದ ಶ್ರಮದ ಶಕ್ತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.