ಧಾರವಾಡದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯುವ ಮೋರ್ಚಾ ಮುಖಂಡ ಪ್ರವೀಣ್ ಕಮ್ಮಾರ್ ಅವರನ್ನು ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಅಪರಿಚಿತ ದುಷ್ಕರ್ಮಿಗಳು ವೈಯಕ್ತಿಕ ಕಾರಣಗಳಿಗಾಗಿ ಪ್ರವೀಣ್ ಕಮ್ಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಕೆಲವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಆದರೆ ಧಾರವಾಡದ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಹಾಗೂ ಕುತ್ತೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಹತ್ಯೆಯಲ್ಲಿ ರಾಜಕೀಯ ಪ್ರತಿಸ್ಪರ್ಧಿಗಳೇ ಸಂಚು ರೂಪಿಸಿದ್ದಾರೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
ಹತ್ಯೆಯ ಬೆನ್ನಲ್ಲೇ ಹಂತಕರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿರುವ ತೇಜಸ್ವಿ ಸೂರ್ಯ, “ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯುವ ಮೋರ್ಚಾ ಧಾರವಾಡ ಘಟಕದ ಕಾರ್ಯನಿರ್ವಾಹಕ ಸದಸ್ಯ ಹಾಗೂ ಕೊಟ್ಟೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಅವರ ಹತ್ಯೆಯ ಸುದ್ದಿಯನ್ನು ತೀವ್ರ ದುಃಖದಿಂದ ಹಂಚಿಕೊಳ್ಳುತ್ತೇವೆ. ನಿನ್ನೆ ತಡರಾತ್ರಿ ಶಂಕಿತ ರಾಜಕೀಯ ವಿರೋಧಿಗಳು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಹಂತಕರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸುತ್ತದೆ ಮತ್ತು ಅವರ ಸದ್ಗತಿಗಾಗಿ ಪ್ರಾರ್ಥಿಸುತ್ತದೆ, ”ಎಂದು ಟ್ವೀಟ್ ಮಾಡಿದ್ದಾರೆ.