ರಂಗೇರಿರುವ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಅಖಾಡಕ್ಕೆ ಪ್ರಧಾನಮಂತ್ರಿ ನರೇಂದ್ರಮೋದಿ ಶನಿವಾರ ಧುಮುಕಲಿದ್ದಾರೆ.
ಅವರು ಕರ್ನಾಟಕದ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಒಂದು ದಿನದ ನಂತರ, ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಏಪ್ರಿಲ್ 29 ಮತ್ತು 30 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಪ್ರಧಾನಿ ಎಂಟು ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ.
ಶನಿವಾರ ಬೆಳಗ್ಗೆ 11 ಗಂಟೆಗೆ ಬೀದರ್ನ ಹುಮನಾಬಾದ್ನಿಂದ ಪ್ರಧಾನಿ ಪ್ರಚಾರ ಆರಂಭಿಸಲಿದ್ದಾರೆ. ನಂತರ ವಿಜಯಪುರಕ್ಕೆ ತೆರಳಿ ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ಮಧ್ಯಾಹ್ನ 3:30 ಕ್ಕೆ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ ನಂತರ ಪ್ರಧಾನಿ ಬೆಂಗಳೂರಿನ ನೈಸ್ ರಸ್ತೆ ಜಂಕ್ಷನ್ನಿಂದ ಸುಮ್ಮನಹಳ್ಳಿ ಜಂಕ್ಷನ್ವರೆಗೆ 45 ನಿಮಿಷಗಳ ಕಾಲ ರೋಡ್ಶೋ ನಡೆಸಲಿದ್ದಾರೆ. ಶನಿವಾರ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಏಪ್ರಿಲ್ 30 ರಂದು ಪ್ರಧಾನಿ ಮೋದಿ ಅವರು ಕೋಲಾರ, ರಾಮನಗರ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಂಚರಿಸಲಿದ್ದಾರೆ. ಚನ್ನಪಟ್ಟಣಕ್ಕೆ ತೆರಳುವ ಮುನ್ನ ಭಾನುವಾರ ಬೆಳಗ್ಗೆ 11 ಗಂಟೆಗೆ ಕೋಲಾರದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಪ್ರಧಾನಿ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರ ಮತ ಯಾಚನೆ ಮಾಡುವ ಸಾರ್ವಜನಿಕ ಸಭೆಯಲ್ಲಿ ಚನ್ನಪಟ್ಟಣದಲ್ಲಿ ಮಾತನಾಡಲಿದ್ದಾರೆ.
ಪ್ರಧಾನಮಂತ್ರಿಯವರು ಹಾಸನ ಜಿಲ್ಲೆಯ ಬೇಲೂರಿನಲ್ಲಿ ಮಧ್ಯಾಹ್ನ 3:30 ಕ್ಕೆ ಮತ್ತೊಂದು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಸಂಜೆ 5.30ಕ್ಕೆ ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.