ಬೆಂಗಳೂರು: ಈ ಆರ್ಥಿಕ ವರ್ಷದಲ್ಲೇ 5 ಗ್ಯಾರಂಟಿ (Guarantee) ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ (Siddaramaiah)ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷದ ವತಿಯಿಂದ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವು. ನಾನು ಮತ್ತು ಡಿ.ಕೆ. ಶಿವಕುಮಾರ್ ಅವರು ಗ್ಯಾರಂಟಿ ಕಾರ್ಡ್ ಗಳಿಗೆ ಸಹಿ ಮಾಡಿದ್ದೇವೆ. ಗ್ಯಾರಂಟಿಗಳನ್ನು ನಾವು ಜಾರಿ ಮಾಡುತ್ತೇವೆ ಎಂಬ ಮಾತುಗಳನ್ನು ಗ್ಯಾರಂಟಿ ಕಾರ್ಡ್ ಗಳ ಮೂಲಕ ಎಲ್ಲ ಮನೆಗಳಿಗೆ ಹಂಚಿಕೆ ಮಾಡಿದ್ದೇವು ಎಂದರು.
ಮೊದಲ ಸಚಿವ ಸಂಪುಟದಲ್ಲಿ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಆದೇಶ ಹೊರಡಿಸಿದ್ದೇವು. ಇಂದು ಸಹ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡಿ ಜಾರಿ ಮಾಡಲು ಕರೆದಿದ್ದೇವು. ನಾವು ಸುದೀರ್ಘವಾಗಿ 5 ಗ್ಯಾರಂಟಿಗಳನ್ನು ಚರ್ಚೆ ಮಾಡಿದ್ದೇವೆ. ಚರ್ಚೆ ಮಾಡಿ ತೀರ್ಮಾನ ಮಾಡಿದ್ದೇವೆ. 5 ಗ್ಯಾರಂಟಿಗಳನ್ನು ಈ ವರ್ಷದ ಆರ್ಥಿಕ ವರ್ಷದಲ್ಲಿ ಜಾರಿಗೆ ತರಬೇಕು ಎಂದು ತೀರ್ಮಾನ ಮಾಡಿದ್ದೇವೆ. ಅದು ಯಾವುದೇ ಜಾತಿ, ಧರ್ಮ, ಭಾಷೆ, ಯಾವೂ ಷರತ್ತುಗಳಿಲ್ಲದೇ ಕರ್ನಾಟಕದ ಜನತೆಗೆ ಗ್ಯಾರಂಟಿಗಳನ್ನು ತಲುಪಿಸುತ್ತೇವೆ ಎಂದರು.