ಬೆಂಗಳೂರು: ಶಾಲಾ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಸರ್ವಾಂಗಣ ಶಿಕ್ಷಣಕ್ಕೆ ಆದ್ಯತೆ ನೀಡಲು 24,347 ಶಾಲೆಗಳಿಗೆ ಪುಸ್ತಕ, ನಿಯತಕಾಲಿಕೆಗಳನ್ನು 20 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು. ಅಲ್ಲದೇ, 50 ಕೋಟಿ ರೂ. ವೆಚ್ಚದಲ್ಲಿ 47 ಕಸ್ತೂರ ಬಾ ವಸತಿ ಶಾಲೆಗಳ ದುರಸ್ತಿ ಮತ್ತು ಸ್ಮಾರ್ಟ್ ಕ್ಲಾಸ್ ರೂಮ್ ಅಭಿವೃದ್ಧಿಪಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಂಡಿರುವುದಾಗಿ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
2023 -24 ನೇ ಸಾಲಿಗೆ 17 ಜಿಲ್ಲೆಗಳ 93 ತಾಲ್ಲೂಕುಗಳಲ್ಲಿನ 24,347 ಶಾಲೆಗಳಿಗೆ ಪ್ರಯೋಜನ ಸಿಗಲಿದೆ. 14,049 ಕಿರಿಯ ಪ್ರಾಥಮಿಕ ಶಾಲೆಗಳು, 8344 ಹಿರಿಯ ಪ್ರಾಥಮಿಕ ಶಾಲೆಗಳು, 1830 ಪ್ರೌಢಶಾಲೆಗಳು, 76 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಯೋಜನೆಯ ಪ್ರಯೋಜನ ಸಿಗಲಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕಸ್ತೂರ ಬಾ ಗಾಂಧಿ ಬಾಲಿಕಾ ಹಾಸ್ಟೆಲ್ ಗಳಲ್ಲಿ ಡಾರ್ಮಿಟರಿ ನಿರ್ಮಾಣ, ವಸತಿ ಶಾಲೆಗಳ ದುರಸ್ತಿ, ಸ್ಮಾರ್ಟ್ ಕ್ಲಾಸ್ ರೂಮ್ ಅಭಿವೃದ್ಧಿ. ಕಾಟ್ ಗಳ ಖರೀದಿಗೆ ಒಟ್ಟು 50 ಕೋಟಿ ರೂ. ಮೊತ್ತದ ಯೋಜನೆಗೆ ಅನುಮೋದನೆ ನೀಡಲಾಗಿದೆ.