ಬಳ್ಳಾರಿ : ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಇದೇ ಡಿಸೆಂಬರ್ 26ರವರೆಗೆ ಅವಧಿ ವಿಸ್ತರಿಸಲಾಗಿದೆ.
ಬಳ್ಳಾರಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೂಲ ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮೂಲ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೇ ಇದ್ದಲ್ಲಿ ಹೊರ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.
ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದ್ದು, ಅವರು ಪಡೆದಿರುವ ಅಂಕ, ಸಂದರ್ಶನದಲ್ಲಿ ಪಡೆದ ಅಂಕ ಹಾಗೂ ಕಂಪ್ಯೂಟರ್ ಬಳಕೆ ಜ್ಞಾನ ಮತ್ತು ಕನ್ನಡ ಭಾಷೆ ಬಳಕೆ ಪ್ರಬುದ್ಧತೆ ಆಧಾರದ ಮೇಲೆ ಮೆರಿಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಮಾಹೆಯಾನ ರೂ.15 ಸಾವಿರ ಸ್ಟೈಫೆಂಡ್ ನೀಡಲಾಗುವುದು.
ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕರ್ನಾಟಕ ಕಾನೂನಾತ್ಮಕ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. 35 ವರ್ಷದೊಳಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಬೇರೆ ಉದ್ಯೋಗ ಮಾಡುವಂತಿಲ್ಲ. ಇಲಾಖೆಯಲ್ಲಿ ಈ ಹಿಂದೆ ತರಬೇತಿ ಪಡೆದವರು ಪುನಃ ಅರ್ಜಿ ಸಲ್ಲಿಸುವಂತಿಲ್ಲ. ನಿಗಧಿತ ಅವಧಿಯ ನಂತರ ಬಂದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಆಸಕ್ತ ಅಭ್ಯರ್ಥಿಗಳು ಅರ್ಜಿಯೊಂದಿಗೆ ತಮ್ಮ ಎಸ್ಎಸ್ಎಲ್ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಸೇರಿದಂತೆ ಕಂಪ್ಯೂಟರ್ ಜ್ಞಾನ ಹೊಂದಿರುವ ಕುರಿತ ಪೂರಕ ದಾಖಲೆಗಳನ್ನು ಲಗತ್ತಿಸಿ ದಿನಾಂಕ 26-12-2023 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಬಳ್ಳಾರಿ ಈ ವಿಳಾಸಕ್ಕೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಕಚೇರಿಗೆ ಸಂಪರ್ಕಿಸಲು ಜಿಲ್ಲಾ ವಾರ್ತಾಧಿಕಾರಿ ಜಡಿಯಪ್ಪ.ಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.