ಬೆಂಗಳೂರು : ಸಂವಿಧಾನದ ಅನುಚ್ಛೇದ 371 (J) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಪ್ರಯುಕ್ತ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಕೆಳಗಿನ ತೀರ್ಮಾನಗಳನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳು
➤ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 (J) ಅಡಿ ರಾಜ್ಯ ಸರ್ಕಾರದ 46 ಇಲಾಖೆಗಳಲ್ಲಿ ಖಾಲಿ ಇರುವ 14,771 ಹುದ್ದೆಗಳ ನೇಮಕಾತಿ ಹಾಗೂ ಪ್ರಾದೇಶಿಕ ಮತ್ತು ರಾಜ್ಯ ಮಟ್ಟದ ಹುದ್ದೆಗಳಲ್ಲಿ ಶೇ. 8ರಷ್ಟು ಮೀಸಲಾತಿಯ ಅನುಸಾರ 8,278 ಹುದ್ದೆಗಳಿಗೆ ಮುಂಬಡ್ತಿ ನೀಡಿ ಸರ್ಕಾರದ ವಿವಿಧ ಇಲಾಖೆಗಳು ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸಂಪುಟ ಉಪ ಸಮಿತಿಯಲ್ಲಿ ಸೂಚನೆ
➤ ಕಲ್ಯಾಣ ಕರ್ನಾಟಕ ಭಾಗದ ನೌಕರರಿಗೆ 371(J) ಪ್ರಕಾರ ರಾಜ್ಯ ವೃಂದದಲ್ಲಿ 8% ರಷ್ಟು ಹುದ್ದೆಗಳನ್ನು ನೀಡುವ ಬಗ್ಗೆ ಜೇಷ್ಟತಾ ಪಟ್ಟಿಗಳನ್ನು ಪ್ರತ್ಯೇಕವಾಗಿ ಪ್ರಕಟಿಸದೇ ಒಂದೇ ಪಟ್ಟಿ ಪ್ರಕಟಿಸಿ ಜೇಷ್ಟತಾ ಪಟ್ಟಿಯಲ್ಲಿ ಅಧಿಕಾರಿ/ನೌಕರರ ಹೆಸರಿನ ಮುಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಎಂದು ನಮೂದಿಸುವ ಮಾದರಿಯಲ್ಲಿಯೇ 371(J) SC , 371(J) ST , 371(J) ಸಾಮಾನ್ಯ, 371(J) ಮಹಿಳೆ ಎಂದು ನಮೂದಿಸಲು ಸೂಕ್ತ ಆದೇಶ ಹೊರಡಿಸಲು ಸೂಚನೆ.
➤ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಕರ ಖಾಲಿ ಹುದ್ದೆಗಳು, ಭರ್ತಿ ಮಾಡಬೇಕಾದ ಹುದ್ದೆಗಳ ಬಗ್ಗೆ ಕ್ರೂಢೀಕೃತ ಮಾಹಿತಿ ಸಲ್ಲಿಸಲು ಹಾಗೂ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸೂಚನೆ
➤ ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ವಿಶ್ವವಿದ್ಯಾಲಯಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಪರಿಶೀಲಿಸಲು ಪ್ರತ್ಯೇಕ ಸಭೆ ಕರೆಯಲು ನಿರ್ಧಾರ
➤ ಬಳ್ಳಾರಿ ಜಿಲ್ಲೆ ಎಂದು ಇರುವುದನ್ನು ವಿಜಯನಗರ ಜಿಲ್ಲೆ ಎಂದು ಬದಲಿಸಿ ಆದೇಶ ಹೊರಡಿಸಲು ಸಂಬಂಧಪಟ್ಟ ಇಲಾಖೆಗೆ ಸೂಚನೆ
➤ ವಿಧಾನ ಸಭೆ/ ವಿಧಾನ ಪರಿಷತ್ತಿನ ಸಚಿವಾಲಯಗಳಲ್ಲಿ 371(J) ಮೀಸಲಾತಿ ಅಳವಡಿಸಿರುವ ಬಗ್ಗೆ ಪೂರ್ಣ ವಿವರ ಪಡೆಯಲು ನಿರ್ಧಾರ
➤ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಡುಗೆ ಸಿಬ್ಬಂದಿಗೆ ಮುಂಬಡ್ತಿ ನೀಡುವಾಗ ಶೇಕಡ 8ರಷ್ಟು ಮೀಸಲಾತಿ ಕಡ್ಡಾಯವಾಗಿ ಪಾಲಿಸಲು ಸೂಚನೆ
➤ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ನಿ. ಇಲ್ಲಿ 371(J) ನಿಯಮಗಳಂತೆ ಸ್ಥಳೀಯ ವೃಂದದ ಅಧಿಕಾರಿ ಮತ್ತು ನೌಕರರಿಗೆ ಮುಂಬಡ್ತಿ ಮತ್ತು ಸೇವಾ ಜೇಷ್ಠತೆ ಪರಿಗಣಿಸಲು ಸೂಚನೆ
ಈ ಸಭೆಯಲ್ಲಿ ಸಚಿವ ಸಂಪುಟ ಉಪಸಮಿತಿ ಸದಸ್ಯರಾದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.