ಬೆಂಗಳೂರು :ರಾಜ್ಯದಲ್ಲಿ ನೂತನ ಬಸ್ ಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದ್ದು, 2 ಸಾವಿರಕ್ಕಿಂತಲೂ ಅಧಿಕ ವಾಹನ ಚಾಲಕರ ಹಾಗೂ ನಿರ್ವಾಹಕರ ಹುದ್ದೆಗಳ ಭರ್ತಿ ಪ್ರಕ್ರಿಯೆ ಕೂಡ ಚಾಲನೆಯಲ್ಲಿದೆ. ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಸಂಚಾರ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಗಾರೆಡ್ಡಿ ತಿಳಿಸಿದರು.
ಕೇಂದ್ರ ಬಸ್ ನಿಲ್ದಾಣದಲ್ಲಿ ಭಾನುವಾರ (ಫೆ.18) ನಡೆದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ಸುಗಳ ಲೋಕಾರ್ಪಣೆ, ಅಪಘಾತರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಹಾಗೂ ಹಾರೂಗೇರಿ ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಬಸ್ ನಿಲ್ದಾಣಗಳ ಕೊರತೆ ಇಲ್ಲ. ಸಾರಿಗೆ ಇಲಾಖೆಯನ್ನು ಇನ್ನಷ್ಟು ಬಲಪಡಿಸಿ, ಗ್ರಾಮೀಣ ಭಾಗದ ಸಾರಿಗೆ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ಗಮನಹರಿಸಲಿದೆ. ಮುಂದಿನ 3 ತಿಂಗಳಲ್ಲಿ ಹೆಚ್ಚುವರಿ ಬಸ್ ಸಂಚಾರ ಕಾರ್ಯಾಚರಣೆ ಕೈಗೊಂಡು ಸಂಚಾರ ವ್ಯವಸ್ಥೆ ಸುಧಾರಣೆಗೆ ತರಲಾಗುವುದು ಎಂದು ಹೇಳಿದರು.
ಅಪಘಾತಗಳಲ್ಲಿ ಮೃತರಾದ ಬಸ್ ಚಾಲಕರಿಗೆ, ಕಂಡಕ್ಟರ್ ಗಳ ವಾರಸುದಾರರಿಗೆ 50 ಲಕ್ಷ ರೂಪಾಯಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಪರಿಹಾರ ಧನವನ್ನು 1 ಕೋಟಿಗೆ ಹೆಚ್ಚಿಸುವಂತೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.