![](https://kannadadunia.com/wp-content/uploads/2024/02/shivamoga.jpg)
ಶಿವಮೊಗ್ಗ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ರದ್ದಾಗುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಾತಿಯ ಆಧಾರದಲ್ಲಿ ಅಲ್ಲ. ಬದಲಾಗಿ ನೀತಿಯ ಆಧಾರದಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಚುನಾವಣಾ ಪೂರ್ವ ಸಮಿತಿಯನ್ನು ರಚಿಸಿ, ಗ್ಯಾರಂಟಿ ಕಾರ್ಡುಗಳನ್ನು ಮನೆ ಮನೆಗಳಿಗೆ ತಲುಪಿಸಿದಂತೆ ಸರ್ಕಾರ ರಚನೆಯಾದ ತಕ್ಷಣ ಯೋಜನೆಗಳನ್ನು ಜಾರಿ ಮಾಡಿ ನಡೆದಂತೆ ನುಡಿದಿದ್ದೇವೆ ಎಂದರು.
ಹೆಣ್ಣು ಕುಟುಂಬದ ಕಣ್ಣು. ಅವರ ಕುಟುಂದಲ್ಲಿ ಭಾಗ್ಯೋದಯವಾಗಲೆಂದು ಗೃಹಲಕ್ಷ್ಮಿ ಯೋಜನೆಯನ್ನು ಬೆಳಗಾವಿಯಲ್ಲಿ ಚಾಲನೆ ನೀಡಿ, ಇದುವರೆಗೆ 1 ಕೋಟಿ 10 ಲಕ್ಷ, ಮಹಿಳೆಯರಿಗೆ ರೂ.2000 ಭತ್ಯೆ ನೀಡಲಾಗಿದ್ದು ರಾಷ್ಟ್ರದಲ್ಲೆ ಇದೊಂದು ಇತಿಹಾಸ.
ಗೃಹಜ್ಯೋತಿ ಯೋಜನೆಯಡಿ ಇದುವರೆಗೆ 1.5 ಕೋಟಿ ಜನರಿಗೆ ಉಚಿತ 200 ಯುನಿಟ್ ವಿದ್ಯುತ್ ನೀಡಲಾಗಿದೆ. ಅನ್ನ ಭಾಗ್ಯ ಯೋಜನೆಯಡಿ 5 ಕೆ ಜಿ ಜೊತೆ ಇನ್ನುಳಿದ ಐದು ಕೆಜಿ ಅಕ್ಕಿ ಬದಲು ಪ್ರತಿ ಸದಸ್ಯರಿಗೆ ಒಂದು ಕೆಜಿಗೆ ರೂ.34 ರಂತೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಬೆಲೆ ಏರಿಕೆ ಸಂಕಷ್ಟದಲ್ಲಿ ಸರ್ಕಾರ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಿದೆ. ಹಾಗೂ ಪ್ರಸ್ತುತ ಹೊಸದಾಗಿ 1000 ಬಸ್ ಖರೀದಿ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಈ ಬಜೆಟ್ ನಲ್ಲಿ 50 ಸಾವಿರ ಕೊಟಿ ಮೀಸಲು ಇಡಲಾಗಿದೆ ಎಂದರು.