ಬೀದರ್ : ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ ಮಾಡಬೇಕೆಂದು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಚಾರಿತ್ರಿಕ ನಿರ್ಣಯಕ್ಕಾಗಿ ಬಸವ ಕಲ್ಯಾಣದಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಜಾತಿ ಪದ್ಧತಿ, ಅಸ್ಪೃಶ್ಯತೆ, ಅಸಮಾನತೆ, ಶೋಷಣೆ ಹಾಗೂ ಧಾರ್ಮಿಕ ಢಂಬಾಚಾರದ ವಿರುದ್ಧ ಬಂಡೆದ್ದ ಬಸವಾದಿ ಶರಣರು ಜನರಲ್ಲಿ ಅರಿವುಮೂಡಿಸಲು ಆಯ್ದುಕೊಂಡ ಸಾಧನ “ವಚನ ಸಾಹಿತ್ಯ. ವಚನಗಳಲ್ಲಿ ಬಸವೇಶ್ವರರಾದಿಯಾಗಿ ನೂರಾರು ಶರಣರ ಬದುಕಿನ ಅನುಭವದ ಸಾರವಿದೆ, ಅಂಧಶ್ರದ್ದೆ- ಮೌಢ್ಯದ ವಿರುದ್ಧದ ಆಕ್ರೋಶವಿದೆ, ಜ್ಞಾನದ ಬೆಳಕಿದೆ ಎಂದು ಹೇಳಿದ್ದಾರೆ.
ಶರಣರ ವಚನಗಳು ಹಾಳೆಗಳಿಗೆ ಸೀಮಿತವಾಗಬಾರದು, ವಚನಗಳ ಪ್ರತಿ ಅಕ್ಷರ ಜನರ ಎದೆಗೆ ಇಳಿಯಬೇಕು, ಆ ಮೂಲಕ ಬಸವಣ್ಣನವರ ಸಮಸಮಾಜದ ಕನಸು ಸಾಕಾರಗೊಳ್ಳಬೇಕು. ಈ ಉದ್ದೇಶದಿಂದ ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ ಮಾಡಬೇಕೆಂದು ನಿರ್ಧರಿಸಿದ್ದೇನೆ ಎಂದು ಘೋಷಿಸಿದ್ದಾರೆ.
ಜಾತಿ, ವರ್ಗ, ಅಸಮಾನತೆ ಇಲ್ಲದ ಮನುಷ್ಯತ್ವದ ಸಮಾಜ ನಿರ್ಮಾಣ ಬಸವಣ್ಣರ ಗುರಿಯಾಗಿತ್ತು. ಹೀಗಾಗಿ ಬುದ್ದ, ಬಸವ, ಅಂಬೇಡ್ಕರ್ ನನಗೆ ಮಾರ್ಗದರ್ಶಕರು. ಇವರ ವಿಚಾರಗಳು ಇಂದು, ನಾಳೆ ಮಾತ್ರವಲ್ಲ ಯಾವತ್ತೂ ಶಾಶ್ವತ. ಇಡೀ ಜಗತ್ತಿಗೆ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವವನ್ನು ಪರಿಚಯಿಸಿದ್ದು ಬಸವಾದಿ ಶರಣರು. ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಇರುವ ಮೌಲ್ಯಗಳಲ್ಲೆವೂ ಬಸವಾದಿ ಶರಣರ ಆಶಯಗಳಲ್ಲಿವೆ ಎಂದರು.
ಬಸವಣ್ಣ ಈ ಮಣ್ಣಿನ ಸಾಂಸ್ಕೃತಿಕ ಸ್ಫೂರ್ತಿ ಆಗಿರುವುದರಿಂದ ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳಲ್ಲಿ ಬಸವಣ್ಣರ ಭಾವಚಿತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದೆ. ಲಕ್ಷಾಂತರ ಕನ್ನಡಿಗರ ಸಾಕ್ಷಿಯಾಗಿ ನಾನು ಬಸವ ಜಯಂತಿಯಂದೇ ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದೆ ಎಂದು ಹೇಳಿದ್ದಾರೆ.
ಎಲವೋ ಎಂದರೆ ನರಕ, ಅಯ್ಯಾ ಎಂದರೆ ಸ್ವರ್ಗ” ಎಂದು ಶರಣರು ಹೇಳಿದ್ದಾರೆ. ದಯೆ ಇಲ್ಲದ ಧರ್ಮ ಯಾವುದಯ್ಯ ಎನ್ನುವ ಮೂಲಕ ನಿಜವಾದ ಧರ್ಮ ಎಂದರೆ ಏನು ಎನ್ನುವುದನ್ನು ತಿಳಿಸಿದ್ದಾರೆ.
ಶರಣರು ಸಂಸ್ಕೃತವನ್ನು ಸಾರಾಸಗಟಾಗಿ ತಿರಸ್ಕರಿಸಿ ಮೊದಲ ಬಾರಿಗೆ ಜನರ ಭಾಷೆಯಲ್ಲಿ, ಜನರಾಡುವ ಭಾಷೆಯಲ್ಲಿ ಧರ್ಮದ ಮೌಲ್ಯಗಳನ್ನು ಸಾರಿದರು. ದಯೆಯೆ ಧರ್ಮದ ಮೂಲ ಎನ್ನುವ ಮಾತು ಎಷ್ಟು ಸರಳವಾಗಿದೆ. ಇದೇ ಜನರ ಭಾಷೆ. ಬಸವಾದಿ ಶರಣರು ನುಡಿದಂತೆ ನಡೆದರು. ನಡೆದಂತೆ ನುಡಿದರು. ಇದೇ ನಮ್ಮ ಸರ್ಕಾರಕ್ಕೆ ಮಾದರಿ. ನಾವು ಚುನಾವಣೆ ವೇಳೆಯಲ್ಲಿ ಕೊಟ್ಟ ಆಶ್ವಾಸನೆಗಳನ್ನು ಅಧಿಕಾರಕ್ಕೆ ಬಂದ ಎಂಟು ತಿಂಗಳಲ್ಲಿ ಈಡೇರಿಸಿ, ನಿಮ್ಮ ಮತಕ್ಕೆ ಗೌರವ ನೀಡಿ ಮತ್ತೆ ನಿಮ್ಮ ಮುಂದೆ ಬಂದು ತಲೆಎತ್ತಿ ನಿಂತಿದ್ದೇವೆ ಎಂದರು.