ಬೆಂಗಳೂರು : ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಮತ್ತೊಂದೆಡೆ ಭಾರಿ ಬಿರುಗಾಳಿ ಕೂಡ ಬೀಸುತ್ತಿದೆ. ಅವಾಂತರಗಳು ಸಂಭವಿಸುತ್ತಿವೆ. ಬಿರುಗಾಳಿ ಹೊಡೆತಕ್ಕೆ ಮರದ ಕೊಂಬೆಯೊಂದು ಬೈಕ್ ಸವಾರನ ಮೇಲೆ ಬಿದ್ದಿರುವ ಘಟನೆ ನಡೆದಿದೆ.
ಬನಶಂಕರಿ 2ನೇ ಹಂತದ ಶ್ರೀನಿವಾಸನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಏಕಾಏಕಿ ಮರದ ಕೊಂಬೆ ಮುರಿದು ಬಿದ್ದಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಕ್ಷಯ್ (29) ಗಾಯಗೊಂಡಿರುವ ಯುವಕ.
ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅಕ್ಷಯ್ ಭಾನುವಾರ ತಂದೆ ಹುಟ್ಟುಹಬ್ಬದ ಹಿನ್ನೆಲೆ ಮಟನ್ ತೆಗೆದುಕೊಂಡು ಬರುವುದಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗಳಾಗಿದ್ದ ಅಕ್ಷಯ್ ಗೆ 4 ಗಂಟೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ತಲೆಚಿಪ್ಪು 17 ಚೂರುಗಳಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಘಟನೆ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮರದ ಕೊಂಬೆ ಬಿದ್ದ ಹೊಡೆತಕ್ಕೆ ಬೈಕ್ ಸವಾರ ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ರಕ್ತದ ಮಡುವಲ್ಲಿ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.