BIG NEWS : ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಡಾ.ಬಿ.ಆರ್ ಅಂಬೇಡ್ಕರ್ : CM ಸಿದ್ದರಾಮಯ್ಯ

ಬೆಂಗಳೂರು : ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಅಂಬೇಡ್ಕರ್  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಂಬೇಡ್ಕರ್ ಅವರ ಪರಿನಿರ್ವಾಣ ದಿನವಾದ ಇಂದು ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಅಂಬೇಡ್ಕರ್ ಅವರು 1956 ಡಿಸೆಂಬರ್ 6ರಂದು ನಮ್ಮನ್ನೆಲ್ಲಾ ಅಗಲಿದರು. ಈ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತಿದೆ. ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು. ಅಂಬೇಡ್ಕರ್ ಅವರು ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ. ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು.

ಕೆಟ್ಟವರ ಕೈಗೆ ಹೋದರೆ ಕೆಟ್ಟದಾಗುತ್ತದೆ ಎಂದು ಅಂಬೇಡ್ಕರ್ ಅವರು ಸ್ಪಷ್ಟವಾಗಿ ಈ ದೇಶದ ಜನರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದರು. ದಲಿತರಿಗೆ ಮಾತ್ರವಲ್ಲದೇ ಸಮಸ್ತ ವರ್ಗದವರಿಗೂ ಸಾಮಾಜಿಕ ಅವಕಾಶಗಳನ್ನು ದೊರಕಿಸಲು ಅವರು ಶ್ರಮಿಸಿದರು. ಅವಕಾಶ ವಂಚಿತರು, ಶೋಷಣೆ, ಅನ್ಯಾಯಕ್ಕೆ, ಅವಮಾನಕ್ಕೆ, ದೌರ್ಜನ್ಯಕ್ಕೆ ಒಳಪಟ್ಟ ಎಲ್ಲಾ ಜನರ ಪರವಾಗಿ ಕೆಲಸ ಮಾಡಿದ್ದರು. ಸಮಾಜದಲ್ಲಿ ಸಮಾನತೆ ಬಯಸಿ ಅದನ್ನೇ ನಿರ್ಮಿಸಲು ಬಹಳ ಸ್ಪಷ್ಟವಾಗಿ ಹೇಳಿದ್ದರು. ಸಂವಿಧಾನದ ಧ್ಯೇಯೋದ್ದೇಶಗಳೂ ಅದನ್ನೇ ಹೇಳುತ್ತದೆ. ಸಂವಿಧಾನದಿಂದ ಅನುಕೂಲ ಪಡೆದವರು ಅವರ ಸೋದರ ಜನಾಂಗಗಳಿಗೆ ಸಹಾಯ ಮಾಡಬೇಕು. ಎಲ್ಲರೂ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕೆಂದು ಬಯಸಿದ್ದರು. ಬಹಳ ಜನ ಸಂವಿಧಾನವನ್ನು ವಿರೋಧಿಸುತ್ತಾರೆ .ಭಾರತ ಬಹುಸಂಸ್ಕೃತಿಯ, ಬಹುತ್ವದ ದೇಶ. ಅನೇಕ ಜಾತಿ, ಧರ್ಮಗಳಿವೆ. ಅನೇಕ ಭಾಷೆಗಳೂ ಇವೆ. ಇದಕ್ಕೆ ಯೋಗ್ಯವಾದ ಸಂವಿಧಾನವನ್ನು ಕೊಟ್ಟವರು ಅಂಬೇಡ್ಕರ್. ಎಲ್ಲಾ ಧರ್ಮಗಳೂ, ಜಾತಿಗಳೂ ಸಮಾನವಾದುದು. ಮಾನವ ಧರ್ಮಕ್ಕೆ ಒತ್ತು ನೀಡಿದ್ದರು. ಮೂಲಭೂತವಾಗಿ ನಾವೆಲ್ಲಾ ಮನುಷ್ಯರು. ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು. ಇದನ್ನು ಅಂಬೇಡ್ಕರ್ ಅವರು ತಮ್ಮ ಬದುಕಿನದುದ್ದಕ್ಕೂ ಸಾರಿದ್ದರು. ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದ ನಾನು ಹಿಂದೂ ಆಗಿ ಹುಟ್ಟಿದ್ದು, ಹಿಂದೂ ಆಗಿ ಸಾಯುವುದಿಲ್ಲ ಎಂದು ತಮ್ಮ ಕಡೇ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಸ್ವೀಕಾರ ಮಾಡಿದ ನಂತರ ಬಹಳ ದಿನಗಳ ಕಾಲ ಉಳಿಯಲಿಲ್ಲ. ಅವರು ಕೊಟ್ಟ ಸಂವಿಧಾನದ ಪ್ರಕಾರ ಮತ್ತು ಅವರ ಹೋರಾಟದ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವುದೇ ಅವರಿಗೆ ನಾವು ಸಲ್ಲಿಸುವ ಗೌರವ. ಅದೇ ರೀತಿಯಲ್ಲಿ ಸಂವಿಧಾನದಲ್ಲಿರುವಂತೆ ಪ್ರಜಾಪ್ರಭುತ್ವ, ಸಮಾನತೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಈಗಾಗಲೇ ಸಭೆ ನಡೆಸಿ ಡ್ರಗ್ಸ್ ಕಂಟ್ರೋಲರ್ ರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದಲ್ಲಿ ಸಾವು ಏಕೆ ಸಂಭವಿಸಿದೆ ಎಂದು ಪರಿಶೀಲಿಸಲಾಗುವುದು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read