ನೆಲಮಂಗಲ: ನಾಲ್ವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರು ಚಾಲಕ ಹಾಗೂ ಗನ್ ಮ್ಯಾನ್ ಗೆ ಜಾಮೀನು ಮಂಜೂರಾಗಿದೆ.
ಅನಂತ್ ಕುಮಾರ್ ಹೆಗಡೆ ತೆರಳುತ್ತಿದ್ದ ಕಾರನ್ನು ಓವರ್ ಟೇಕ್ ಮಾಡಿದ್ದಕ್ಕೆ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ, ಚಾಲಕ ಮಹೇಶ್ ಹಾಗೂ ಗನ್ ಮ್ಯಾನ್ ಶ್ರೀಧರ್ ಹಲ್ಲೆ ನಡೆಸಿದ್ದರು. ಹಲ್ಲೆಗೊಳಗಾಗಿದ್ದ ಸಲ್ಮಾನ್, ಸೈಫ್, ಇಲಿಯಾಜ್ ಖಾನ್ ಹಾಗೂ ಉನ್ನೀಸಾ ದಾಬಸ್ ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ವೇಳೆ ಕಾರಿನಲ್ಲಿ ಅನಂತ್ ಕುಮಾರ್ ಹೆಗಡೆ ಕೂಡ ಇದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿನಂತ್ ಕುಮಾರ್ ಹೆಗಡೆ, ಕಾರು ಚಾಲಕ, ಗನ್ ಮ್ಯಾನ್ ಹಾಗೂ ಪುತ್ರನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ದಾಬಸ್ ಪೇಟೆ ಪೊಲೀಸರು ಅನಂತ್ ಕುಮಾರ್ ಹೆಗಡೆ ಕಾರು ಚಾಲಕ ಹಾಗೂ ಗನ್ ಮ್ಯಾನ್ ನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಕಾರು ಚಾಲಕ ಹಾಗೂ ಗನ್ ಮ್ಯಾನ್ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.